Ticker

6/recent/ticker-posts

Ad Code

Responsive Advertisement

ತೈಲ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಹೋರಾಟ

ಬೆಂಗಳೂರು:   ತೈಲ ಬೆಲೆ ಏರಿಕೆ ಖಂಡಿಸಿ ಸರ್ಕಾರದ ವಿರುದ್ಧ ಹೋರಾಟ ಮಾಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ಯಾವ ಕ್ಷೇತ್ರದಲ್ಲಿ ನಮ್ಮ ಪಕ್ಷದ ಶಾಸಕರಿಲ್ಲವೋ ಅಂತಹ ಕ್ಷೇತ್ರಗಳಲ್ಲಿ ಹೋರಾಟ ಆರಂಭವಾಗಲಿದೆ. ಮಾರ್ಚ್ 3ರಂದು ಕುರುಡುಮಲೆಗೆ, ನಂತರ ದೇವನಹಳ್ಳಿಯಲ್ಲಿ ಪಾದಯಾತ್ರೆ, ಸಂಜೆ ಚಿಕ್ಕಬಳ್ಳಾಪುರದಲ್ಲಿ ಹೋರಾಟ ಹಮ್ಮಿಕೊಂಡಿದ್ದೇವೆ.

ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ಪೆಟ್ರೋಲ್ ಬೆಲೆ ಏರಿಕೆ, ಆಸ್ತಿ, ನೀರಿನ ಕರ ಹೆಚ್ಚಳದ ಬಗ್ಗೆ ಹೋರಾಟ ಮಾಡುತ್ತೇವೆ.  ಕೇಂದ್ರ, ರಾಜ್ಯ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ನಿರ್ಧರಿಸಿದ್ದೇವೆ. ಪ್ರತಿಪಕ್ಷ ನಾಯಕರು ಈ ಹೋರಾಟಕ್ಕೆ ಚಾಲನೆ ಕೊಡಲಿದ್ದಾರೆ. ಬಜೆಟ್ ಅಧಿವೇಶನದ ನಂತರವೂ ಹೋರಾಟ ಮುಂದುವರಿಯಲಿದೆ ಎಂದು ಡಿಕೆಶಿ ಹೇಳಿದರು.

ಬಿಬಿಎಂಪಿ ಮಾಜಿ ಮೇಯರ್ ಸಂಪತ್‌ರಾಜ್ ಯಾವ ಪ್ರಕರಣದಲ್ಲೂ ಭಾಗಿಯಾಗಿಲ್ಲ. ಡಿಜೆ ಹಳ್ಳಿ ಪ್ರಕರಣದಲ್ಲಿ ತಪ್ಪು ಮಾಡಿಲ್ಲ. ಯಾರು ಇದರಲ್ಲಿ ಭಾಗವಹಿಸಿದ್ದಾರೆ ನನಗೆ ಗೊತ್ತಿಲ್ಲ. ಇದು ಬಿಜೆಪಿ ಸರ್ಕಾರದ ಸಂಪೂರ್ಣ ವೈಫಲ್ಯ ಎಂದು ಡಿಕೆಶಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.


ಮೈಸೂರು ಪಾಲಿಕೆ ಮೇಯರ್ ಆಯ್ಕೆ ವಿಚಾರವಾಗಿ ಕುಮಾರಸ್ವಾಮಿ ಅವರಿಗೆ ಡಿಕೆಶಿ ಕರೆ ಮಾಡಿದ್ದರು ಎಂಬ ವಿಚಾರವಾಗಿ ಪ್ರತಿಕ್ರಿಯಿಸಿದ ಡಿಕೆಶಿ, ನಾನು ಕುಮಾರಸ್ವಾಮಿ ಜೊತೆ ಮಾತನಾಡಿಲ್ಲ. ನಾನು ಮಾತನಾಡಿದ್ದು ಸಾ.ರಾ.ಮಹೇಶ್ ಜೊತೆ. ಹಿಂದಿನ ಪರಂಪರೆ ಮುಂದುವರಿಸಿ ಎಂದು ಮನವಿ ಮಾಡಿದ್ದೆ. ಆದರೆ, ಎಚ್​ಡಿಕೆ ಜೊತೆ ಮಾತನಾಡಿಲ್ಲ ಎಂದು ಸ್ಪಷ್ಟಪಡಿಸಿದರು.


ಇದೇ ಸಂದರ್ಭದಲ್ಲಿ ಮಾಜಿ ಶಾಸಕ ಪ್ರಸನ್ನಕುಮಾರ್ ಅವರು ಕಾಂಗ್ರೆಸ್ ಸೇರ್ಪಡೆಯಾದರು. ಪ್ರಸನ್ನಕುಮಾರ್ ಅವರು ಡಿಕೆಶಿ ಪಕ್ಷಕ್ಕೆ ಬರಮಾಡಿಕೊಂಡರು.  ಈ ವೇಳೆ ಮಾಜಿ ಸಚಿವ ರಾಮಲಿಂಗಾರೆಡ್ಡಿ ಉಪಸ್ಥಿತರಿದ್ದರು.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮೈಸೂರು ಮಹಾನಗರ ಪಾಲಿಕೆ ಮೇಯರ್ ಆಯ್ಕೆ ವಿಚಾರವಾಗಿ ಕಾಂಗ್ರೆಸ್ ಮುಖಂಡರು ಬೇಸರಗೊಂಡಿದ್ದು, ಕೆಪಿಸಿಸಿ ಅಧ್ಯಕ್ಷ ಡಿಕೆಶಿ ವಿರುದ್ಧ ಅಸಮಾಧಾನ ಹೊರಹಾಕಿದ್ದರು. ಜೆಡಿಎಸ್​ ಜೊತೆ ಮೈತ್ರಿ ಮಾಡಿಕೊಂಡ ಬಗ್ಗೆ ರಮೇಶ್ ಕುಮಾರ್ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ. ಪಕ್ಷದಲ್ಲಿ ಚರ್ಚಿಸದೆ ಹೇಗೆ ನಿರ್ಧಾರ ತೆಗೆದುಕೊಂಡಿರಿ? ನೀವೊಬ್ಬರೆ ನಿರ್ಧಾರ ಮಾಡುವುದಾದರೆ ನಾವ್ಯಾಕೆ ಇರಬೇಕು? ಸಿಎಲ್​ಪಿ ನಾಯಕರ ಅನುಮತಿ ಪಡೆದುಕೊಂಡ್ರಾ..? ಎಂದು ನೇರವಾಗಿ ಡಿ.ಕೆ.ಶಿವಕುಮಾರ್ ಅವರಿಗೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಪ್ರಶ್ನೆ ಮಾಡಿದರು.

Post a Comment

0 Comments

Ad Code

Responsive Advertisement