ಬೆಂಗಳೂರು (ಫೆ. 25): ಲ್ಯಾಪ್ಟಾಪ್, ಟ್ಯಾಬ್ ಇತರೆ ಎಲೆಕ್ಟ್ರಾನಿಕ್ ಉತ್ಪನ್ನಗಳ ತಯಾರಿಕೆಯಲ್ಲಿ ಮುಂಚೂಣಿಯ ನೋಯ್ಡಾ ಮೂಲದ ಡಿಕ್ಸನ್ ಕಂಪನಿ, ಕರ್ನಾಟಕದಲ್ಲಿ ತಯಾರಿಕಾ ಘಟಕ ಪ್ರಾರಂಭ ಮಾಡಲು ಉದ್ದೇಶಿಸಿದೆ.
ಡಿಕ್ಸನ್ ಕಂಪನಿಯ ಕಾರ್ಯಕಾರಿ ಅಧ್ಯಕ್ಷ ಸುನಿಲ್ ವಚಾನಿ ಐಟಿ- ಬಿಟಿ, ಎಲೆಕ್ಟ್ರಾನಿಕ್ ಖಾತೆ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಮುಂದೆ ಪ್ರಸ್ತಾವನೆ ಸಲ್ಲಿಸಿ ಮಾತುಕತೆ ನಡೆಸಿದ್ದಾರೆ. ಅಗತ್ಯವಾದ ಜಾಗ ಹಾಗೂ ಇತರೆ ಅಂಶಗಳ ಬಗ್ಗೆ ಬೇಡಿಕೆ ಇಟ್ಟಿದ್ದು, ಕಂಪನಿಯ ಪ್ರಸ್ತಾವನೆಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಜಮೀನು ಕೊಡುವ ಭರವಸೆ ಯನ್ನು ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ್ ಅವರು ನೀಡಿದ್ದಾರೆ.
ಎಲೆಕ್ಟ್ರಾನಿಕ್ಸ್ ವ್ಯವಸ್ಥೆ ಮತ್ತು ಅಭಿವೃದ್ಧಿ ನಿರ್ವಹಣಾ (ಇಎಸ್ಡಿಎಂ) ಇಲಾಖೆಯ ವ್ಯಾಪ್ತಿಯಲ್ಲಿ ಈ ಯೋಜನೆ ಕಾರ್ಯಗತವಾಗಲಿದೆ. ಕೋಲಾರ ಜಿಲ್ಲೆಯ ಮಾಸ್ತೇನಹಳ್ಳಿ, ಮಿಂಡೇನಹಳ್ಳಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹರಳೂರು, ರಾಮನಗರ ಜಿಲ್ಲೆಯ ಹಾರೋಹಳ್ಳಿಯಲ್ಲಿರುವ ಜಾಗಗಳ ಪೈಕಿ ಯಾವುದಾದರೂ ಒಂದು ಸ್ಥಳದಲ್ಲಿ ತಯಾರಿಕಾ ಘಟಕವನ್ನು ಡಿಕ್ಸನ್ ಕಂಪನಿ ಸ್ಥಾಪನೆ ಮಾಡಲು ಜಮೀನು ನೀಡಲಾಗುವುದು ಎಂದು ಡಾ.ಸಿ.ಎನ್. ಅಶ್ವತ್ಥನಾರಾಯಣ್ ಅವರು ಮಾಹಿತಿ ನೀಡಿದ್ದಾರೆ.
ಕಂಪನಿಯು 10ರಿಂದ 15 ಎಕರೆಯಷ್ಟು ಭೂಮಿಗೆ ಬೇಡಿಕೆ ಇಟ್ಟಿದೆ. ಇಎಸ್ಡಿಎಂ ನೀತಿಯ ಪ್ರಕಾರ ಬೆಂಗಳೂರಿನ ಹೊರಗೆ ಮೇಲೆ ತಿಳಿಸಿದ ಯಾವುದೇ ಜಾಗದಲ್ಲಿ ಕಂಪನಿ ತನ್ನ ಘಟಕವನ್ನು ಸ್ಥಾಪನೆ ಮಾಡಿದರೆ ಸರಕಾರದಿಂದ ಸಿಗಲಿರುವ ಎಲ್ಲ ಸಬ್ಸಿಡಿ, ಪ್ರಯೋಜನಗಳು ದೊರೆಯಲಿವೆ. ಸ್ಥಳೀಯರಿಗೆ ಉದ್ಯೋಗ ನೀಡುವ ಬಗ್ಗೆಯೂ ಕಂಪನಿಗೆ ಮನವರಿಕೆ ಮಾಡಲಾಗಿದೆ ಎಂದು ತಿಳಿಸಿದರು.
ಸುಮಾರು 30 ಸಾವಿರ ಕೋಟಿಗೂ ಹೆಚ್ಚು ಮಾರುಕಟ್ಟೆ ಮೌಲ್ಯವನ್ನು ಹೊಂದಿರುವ ಡಿಕ್ಸನ್ ಕಂಪನಿಯು ಲ್ಯಾಪ್ಟಾಪ್, ಟ್ಯಾಬ್, ಡೆ ಸ್ಕ್ಟಾಪ್, ಸಿಎಫ್ಎಲ್ ಬಲ್ಬ್ಗಳು, ಎಲ್ಇಡಿ ಟಿವಿಗಳು, ಸಿಸಿಟಿವಿ, ವಾಷಿಂಗ್ ಮಷಿನ್ ಸೇರಿದಂತೆ ಗೃಹೋಪಯೋಗಿ ವಸ್ತುಗಳ ತಯಾರಿಕೆಯಲ್ಲಿ ಹೆಸರುವಾಸಿಯಾಗಿದೆ.
ಡಿಸಿಟಿಇ ಯ ವಿಸ್ತರಣಾ ಉಪಕ್ರಮದ ಅಡಿಯಲ್ಲಿ12,500 ಕಂಪ್ಯೂಟರ್ಗಳನ್ನು ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಒದಗಿಸುವ ಸಂಬಂಧ ಕಾಗ್ನಿಜೆಂಟ್- ರೋಟರಿ ಕ್ಲಬ್ ಜತೆ ಸರ್ಕಾರ ಒಪ್ಪಂದಕ್ಕೆ ಸಹಿ ಹಾಕಲಿದೆ ಎಂದು ಇದೇ ವೇಳೆ ಡಿಸಿಎಂ ತಿಳಿಸಿದರು. ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಅತುಲ್ ಲಾಲ್, ಐಟಿ- ಬಿಟಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಮಣ ರೆಡ್ಡಿ, ಡಿಸಿಎಂ ಕಾರ್ಯದರ್ಶಿ ಪಿ.ಪ್ರದೀಪ, ಐಟಿ ಇಲಾಖೆ ನಿರ್ದೇಶಕಿ ಮೀನಾ ನಾಗರಾಜ, ಕೈಗಾರಿಕಾ ಅಭಿವೃದ್ಧಿ ಆಯುಕ್ತೆ ಗುಂಜನ್ ಕೃಷ್ಣ ಸರಕಾರದ ಹಿರಿಯ ಅಧಿಕಾರಿಗಳು ಇದ್ದರು.



0 Comments