ಬೆಳಗಾವಿ (ಮಾ. 23): ಏಪ್ರಿಲ್ 17ರಂದು ನಡೆಯುವ ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಬೆಳಗಾವಿ ಜಿಲ್ಲಾಡಳಿತ ಎಲ್ಲಾ ರೀತಿಯ ಸಿದ್ಧತೆಯನ್ನು ಮಾಡಿಕೊಂಡಿದೆ. ಈ ಬಾರಿ ಕೊರೋನಾ ಸೋಂಕಿನ ಕಾರಣದಿಂದ 80 ವರ್ಷಕ್ಕೂ ಮೇಲ್ಪಟ್ಟವರು, ವಿಕಲಚೇತನರು ಹಾಗೂ ಕೊರೋನಾ ಸೋಂಕಿತರು, ಶಂಕಿತರಿಗೆ ಅಂಚೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ. ಅಷ್ಟೇ ಅಲ್ಲದೇ ನಾಮಪತ್ರ ಸಲ್ಲಿಕೆಗೆ ಅಭ್ಯರ್ಥಿಯ ಜತೆಗೆ ಕೇವಲ ಇಬ್ಬರಿಗೆ ಮಾತ್ರ ಅವಕಾಶ ನೀಡಲಾಗಿದೆ. ಇಂದಿನಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದ್ದು, ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯ ಸುತ್ತಮುತ್ತ ಕಲಂ 144ರ ಅನ್ವಯ ನಿಷೇಧಾಜ್ಞೆಯನ್ನು ಜಾರಿ ಮಾಡಲಾಗಿದೆ. ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಇಂದಿನಿಂದಲೇ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ಮಾರ್ಚ್ 30 ಅಂತಿಮ ದಿನವಾಗಿದೆ. ಮಾರ್ಚ್ 31ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಏಪ್ರಿಲ್ 3 ನಾಮಪತ್ರ ವಾಪಸ್ ಪಡೆಯಲು ಕಡೆಯ ದಿನವಾಗಿದೆ. ಕ್ಷೇತ್ರದಲ್ಲಿ ಒಟ್ಟು 18.07 ಲಕ್ಷ ಮತದಾರರು ಇದ್ದಾರೆ. ಇದರಲ್ಲಿ 7925 ಸೇವಾ ಮತದಾರರು, 12,29 ವಿಕಲಚೇತನ ಮತದಾರರು, ಹಾಗೂ 329ವಿವಿಧ ಕ್ಷೇತ್ರ ಗಣ್ಯ ಮತದಾರರು ಎಂದು ಗುರುತಿಸಲಾಗಿದೆ. ಕ್ಷೇತ್ರದಲ್ಲಿ 22,461 ಯುವ ಮತದಾರರು ಇದ್ದಾರೆ. ಕ್ಷೇತ್ರದಲ್ಲಿ 41,535 ಜನ 80 ವರ್ಷಕ್ಕೂ ಮೆಲ್ಪಟ್ಟ ಮತದಾರರಿದ್ದಾರೆ.

ಏ. 17ರಂದು ಮತದಾನ ಪ್ರಕ್ರಿಯೆ ನಡೆಯಲಿದ್ದು, ಇದಕ್ಕಾಗಿ 2566 ಮತಗಟ್ಟೆ ಸ್ಥಾಪನೆ ಮಾಡಲಾಗಿದೆ. 1 ಸಾವಿರಕ್ಕೂ ಅಧಿಕ ಮತದಾರರಿರುವ ಕಡೆಗಳಲ್ಲಿ ಹೆಚ್ಚುವರಿಯಾಗಿ 502 ಮತಗಟ್ಟೆ ಸ್ಥಾಪನೆ ಮಾಡಲಾಗಿದೆ. ಚುನಾವಣೆ ಕಾರ್ಯಕ್ಕಾಗಿ 11,290 ಸಿಬ್ಬಂಧಿ ನಿಯೋಜನೆ ಮಾಡಲಾಗಿದೆ. ಅಗತ್ಯಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಬ್ಯಾಲೆಟ್ ಯುನಿಟ್, ಕಂಟ್ರೋಲ್ ಯುನಿಟ್ ಹಾಗೂ ವಿವಿಪ್ಯಾಡ್ ಲಭ್ಯವಿದೆ ಎಂದು ಜಿಲ್ಲಾಧಿಕಾರಿ ಎಂ ಜಿ ಹಿರೇಮಠ ಹೇಳಿದ್ದಾರೆ. ಬೆಳಗಾವಿ ಕ್ಷೇತ್ರವ್ಯಾಪ್ತಿಯಲ್ಲಿ ಬರುವ 8 ವಿಧಾನಸಭೆ ಕ್ಷೇತ್ರಗಳಿಗೆ ಸಹಾಯಕ ಚುನಾವಣಾ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ನೀತಿ ಸಂಹಿತೆ ಉಲ್ಲಂಘನೆ ದೂರು ದಾಖಲಿಸಲು ಪ್ರತ್ಯೇಕ ಕಂಟ್ರೋಲ್ ರೂಂ ವ್ಯವಸ್ಥೆ ಸಹ ಮಾಡಲಾಗಿದೆ. ಜಿಲ್ಲೆಯಲ್ಲಿ ಅಕ್ರಮ ತಡೆಯುವ ದೃಷ್ಠಿಯಿಂದ 27 ಚೆಕ್ ಪೋಸ್ಟ್ ನಿರ್ಮಾಣ ಮಾಡಲಾಗಿದೆ.
ಚುನಾವಣೆ ನಾಮಪತ್ರ ಸಲ್ಲಿಕೆ ಮಾಡಲು ಅಭ್ಯರ್ಥಿಯ ಜತೆಗೆ ಕೇವಲ ಇಬ್ಬರು ಮಾತ್ರ ಅವಕಾಶ ಕಲ್ಪಿಸಲಾಗಿದೆ. ಮೇ 2ರಂದು ಬೆಳಗಾವಿಯ ಆರ್ ಪಿ ಡಿ ಕಾಲೇಜಿನಲ್ಲಿ ಮತ ಏಣಿಕೆ ನಡೆಯಲಿದೆ. ಮಾದರಿ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಜಯಂತಿ, ಸಭೆ ಸಮಾರಂಭಗಳ ಆಚರಣೆಗೆ ಅವಕಾಶ ನೀಡಲಾಗುವದು. ಆದರೇ ಎಲ್ಲದಕ್ಕೂ ಷರತ್ತು ಅನ್ವಯವಾಗಲಿದೆ ಎಂದು ಜಿಲ್ಲಾಧಿಕಾರಿ ಎಂ ಜಿ ಹಿರೇಮಠ ಹೇಳಿದ್ದಾರೆ. ಉಪಚುನಾವಣೆ ಹಿನ್ನೆಯಲ್ಲಿ ಭದ್ರೆತೆಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
ಉಪಚುನಾವಣೆ ಸಿದ್ದತೆ ಬಗ್ಗೆ ಬೆಳಗಾವಿ ಜಿಲ್ಳಾಧಿಕಾರಿ ಕಚೇರಿಯಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ನಗರ ಪೊಲೀಸ್ ಆಯುಕ್ತ ಡಾ. ಕೆ ತ್ಯಾಗರಾಜನ್, ಎಸ್ಪಿ ಲಕ್ಷ್ಮಣ ನಿಂಬರಗಿ, ಜಿಪಂ ಸಿಇಓ ದರ್ಶನ್, ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಇದ್ದರು.ಇದೇ ವೇಳೆ, ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳಿಗೂ ಉಪಚುನಾವಣೆ ಆಗಲಿದ್ದು, ನಾಮಪತ್ರ ಸಲ್ಲಿಕೆಗೆ ಮಾ. 30ರವರೆಗೆ ಅವಕಾಶ ಇದೆ.
0 Comments