ತುಮಕೂರು : ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿಂದು ನಡೆದ 2020-21ನೇ ಸಾಲಿನ 4ನೇ ತ್ರೈಮಾಸಿಕಕೆಡಿಪಿಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 2ನೇ ಅಲೆ ನಿಯಂತ್ರಣಕ್ಕೆ ಜಿಲ್ಲೆಯಲ್ಲಿ ಸರ್ಕಾರದ ಮಾರ್ಗಸೂಚಿನ್ವಯ ಕ್ರಮ ಕೈಗೊಂಡಿದ್ದು, ಸಮರ್ಪಕ ಹಾಸಿಗೆ, ಐಸಿಯು ವ್ಯವಸ್ಥೆ ಮತ್ತು ಲಸಿಕಾ ವಿತರಣೆಯನ್ನು ಮಾಡಲಾಗುತ್ತಿದೆ ಎಂದು ಸಣ್ಣ ನೀರಾವರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜೆ.ಸಿ. ಮಾಧುಸ್ವಾಮಿ ಅವರು ತಿಳಿಸಿದರು. ಜಿಲ್ಲೆಯಲ್ಲಿ ಕೋವಿಡ್ ಲಸಿಕೆಯ ಪೂರೈಕೆ ಸಮರ್ಪಕವಾಗಿದೆ. ಪ್ರಸ್ತುತ ಲಸಿಕೆ, ಹಾಸಿಗೆಗಳ ಕೊರತೆಯಿಲ್ಲ. ಕೋವಿಡ್ ತಡೆಗೆ ಮನೆ-ಮನೆ ಸರ್ವೆ ಕಾರ್ಯವನ್ನೂ ಮಾಡಲಾಗುತ್ತಿದ್ದು, ಲಕ್ಷಣ ಕಂಡುಬಂದಲ್ಲಿ ಅಂತಹವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಿ ಕೋವಿಡ್ ಪಾಸಿಟಿವ್ ಬಂದರೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಬೇಕು. ವೈದ್ಯರ ಸಲಹಾ ಚೀಟಿಯಿಲ್ಲದೆ ಮೆಡಿಕಲ್ಗಳಲ್ಲಿ ಔಷಧಗಳನ್ನು ನೀಡಬಾರದು. ವಯಸ್ಸಾದವರನ್ನು ಹೆಚ್ಚು ಪರೀಕ್ಷೆಗೆ ಒಳಪಡಿಸಬೇಕು. ವಿವಿಧ ರೋಗಗಳಿಂದ ಆಸ್ಪತ್ರೆಗೆ ದಾಖಲಾಗುವ ರೋಗಿಗಳನ್ನು ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೆ ಒಳಪಡಿಸಿ ಬಳಿಕ ದಾಖಲು ಮಾಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.
ಕೋವಿಡ್ ನಿಯಂತ್ರಣಕ್ಕೆ ಜಿಲ್ಲೆಯಲ್ಲಿ ಸರ್ಕಾರದ ಮಾರ್ಗಸೂಚಿಗಳನ್ನೇ ಪಾಲಿಸಬೇಕಾಗಿದೆ. ಹಾಗಾಗಿ ಬೆಂಗಳೂರಿಗೆ ಸಮೀಪವಿರುವ, ರಾಷ್ಟ್ರೀಯ ಹೆದ್ದಾರಿ ಹಾದು ಹೋಗುವ, ಆಂಧ್ರಪ್ರದೇಶ ಗಡಿಪ್ರದೇಶಕ್ಕೆ ಹೊಂದಿಕೊಂಡಿರುವ ತುಮಕೂರು ಜಿಲ್ಲೆಗೆ ಸೋಂಕು ಹೇಗೆ ಬರುತ್ತದೆ ಎಂಬುದನ್ನು ಪತ್ತೆ ಹಚ್ಚಲು ಕಷ್ಟವಾಗುತ್ತಿದೆ. ಈ ಬಗ್ಗೆ ಸ್ವಯಃ ನಿರ್ಧಾರ ಕೈಗೊಳ್ಳಲು ಜಿಲ್ಲೆಗೆ ಅನುಮತಿ ಕೊಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗುವುದು ಎಂದು ಅವರು ಹೇಳಿದರು. ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ಮಾತನಾಡಿ, ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಯಲ್ಲಿ 200 ಹಾಸಿಗೆ, 21 ಐಸಿಯು ಹಾಗೂ ಎಲ್ಲಾ ತಾಲೂಕುಗಳಲ್ಲಿಯೂ ಆಮ್ಲಜನಕ ಸಹಿತ 50 ಹಾಸಿಗೆ ವ್ಯವಸ್ಥೆಯ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ತುಮಕೂರಿನ ಎರಡು ಮೆಡಿಕಲ್ ಕಾಲೇಜುಗಳಲ್ಲಿ ಸರ್ಕಾರದ ನಿರ್ದೇಶನದಂತೆ ಕೋವಿಡ್ಗಾಗಿ ಶೇ.50ರಷ್ಟು ಹಾಸಿಗೆ ಮೀಸಲಿರಿಸಲು ಒಪ್ಪಿಗೆ ನೀಡಿದ್ದು, ಅದರಂತೆ ಕೋವಿಡ್ ಸೋಂಕಿತರು ಅಲ್ಲಿಯೂ ದಾಖಲು ಆಗಬಹುದು. ಉಳಿದಂತೆ ಭಾರತೀಯ ವೈದ್ಯಕೀಯ ಸಂಘದಡಿಯ ಖಾಸಗಿ ಆಸ್ಪತ್ರೆಗಳಲ್ಲಿಯೂ ಶೇ.50ರಷ್ಟು ಹಾಸಿಗೆ ಮೀಸಲಿಡಲು ಒಪ್ಪಿಗೆ ನೀಡಿದ್ದಾರೆ. ಜಿಲ್ಲೆಯಲ್ಲಿ ಸದ್ಯಕ್ಕೆ ಆಮ್ಲಜನಕದ ಸಮಸ್ಯೆಯಿಲ್ಲ. ಮೊದಲು ಸರ್ಕಾರಿ ಲ್ಯಾಬ್ಗಳಲ್ಲಿ ಮಾತ್ರ ಕೋವಿಡ್ ಪರೀಕ್ಷೆ ಮಾಡಲು ಅವಕಾಶವಿತ್ತು. ಆದರೆ, ಈಗ ಖಾಸಗಿ ಆಸ್ಪತ್ರೆಗಳ ಲ್ಯಾಬ್ನಲ್ಲಿಯೂ ಪರೀಕ್ಷೆ ಮಾಡಲು ಅವಕಾಶ ಕಲ್ಪಿಸಿರುವುದರಿಂದ ಹೆಚ್ಚು ಪರೀಕ್ಷೆ ಮಾಡಲು ಅನಕೂಲವಾಗಲಿದೆ ಎಂದು ತಿಳಿಸಿದರು.
ಶಾಸಕ ಬಿ.ಸಿ. ನಾಗೇಶ್ ಮಾತನಾಡಿ, ಶುದ್ಧ ಕುಡಿಯುವ ನೀರಿನ ಘಟಕಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ. ಅಧಿಕಾರಿಗಳು ಕೆಲಸ ಮಾಡುವಲ್ಲಿ ವಿಳಂಬ ಧೋರಣೆ ಮಾಡುತ್ತಿದ್ದಾರೆ ಎಂದಾಗ, ಇದಕ್ಕೆ ಪ್ರತಿಕ್ರಿಯಿಸಿ ಸಚಿವರು, ಶಾಸಕರ ಅನುದಾನ ಕನ್ವರ್ಜೆನ್ಸ್ಗೆ ಕೊಟ್ಟಿದ್ದಂತಹ ಕಾಮಗಾರಿಗಳು ಯಾವ ಹಂತದಲ್ಲಿವೆ ಎಂಬುದರ ಮಾಹಿತಿಯನ್ನು ಒದಗಿಸುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿದರು. ಎಂಎಲ್ಸಿ ತಿಪ್ಪೇಸ್ವಾಮಿ ಮಾತನಾಡಿ, ಫಸಲ್ ಭೀಮಾ ಯೋಜನೆಯಡಿ ಸಿಗುವ ಸೌಲಭ್ಯಕ್ಕೆ ರೈತರ ನೋಂದಣಿ ಕಡಿಮೆಯಾಗುತ್ತಿದೆ. ರೈತರು ಈ ಸೌಲಭ್ಯದಿಂದ ವಂಚಿತರಾಗುತ್ತಿದ್ದಾರೆ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಪಸಲ್ ಭೀಮಾ ಯೋಜನೆ ಬಗ್ಗೆ ರೈತರಿಗೆ ಹೆಚ್ಚು ಮಾಹಿತಿ ನೀಡುವಂತೆ ಜಿಲ್ಲಾ ಕೃಷಿ ಇಲಾಖೆ ಜಂಟಿ ನಿರ್ದೇಶಕರಿಗೆ ನಿರ್ದೇಶಿ ಸಿದರು. ಜಾನುವಾರುಗಳಿಗೆ ವಿವಿಧ ಸಾಂಕ್ರಾಮಿಕ ರೋಗಗಳ ವಿರುದ್ಧ ಲಸಿಕೆ ಹಾಕುವ ಗುರಿ ನೂರರಷ್ಟು ಸಾಧನೆಯಾಗಿಲ್ಲ. ಕುರಿಗಳನ್ನು ಒಳಪಡಿಸಿಕೊಂಡು ಲಸಿಕೆ ಕಾರ್ಯಕ್ರಮ ಅನುಷ್ಠಾನಗೊಳಿಸಿ. ಲಸಿಕೆ ಹಾಕಿಸುವ ಬಗ್ಗೆ ಹೆಚ್ಚು ಅರಿವು ಮೂಡಿಸಿ ಎಂದು ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಲತಾ ರವಿಕುಮಾರ್, ಉಪಾಧ್ಯಕ್ಷೆ ಶಾರದಾ ನರಸಿಂಹಮೂರ್ತಿ, ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಚೌಡಪ್ಪ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಕೇಶ್ ಸಿಂಗ್, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಡಾ.ಕೆ.ವಂಶಿಕೃಷ್ಣ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿದ್ಯಾಕುಮಾರಿ ಕೆ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.
0 Comments