ಏಪ್ರಿಲ್ 20ರ ತನಕ ಜಾತ್ರೆ ಸೇರಿದಂತೆ ಹೆಚ್ಚು ಜನರು ಸೇರುವ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವಂತಿಲ್ಲ ಎಂದು ಸರ್ಕಾರ ಹೇಳಿದೆ. ರಾಜ್ಯ ಸರ್ಕಾರ ಕಠಿಣ ನಿಯಮಗಳನ್ನು ಜಾರಿ ಮಾಡಿದ ಕಾರಣ ರಾಮನಗರ ತಾಲೂಕಿನ ಮಾಗಡಿಯ ಪ್ರಸಿದ್ಧ ತಿರುಮಲೆ ರಂಗನಾಥಸ್ವಾಮಿಯ ದನಗಳ ಜಾತ್ರೆ ಸಹ ರದ್ದು ಮಾಡಲಾಗಿದೆ.
ಮಾಗಡಿ ತಹಶೀಲ್ದಾರ್ ಶ್ರೀನಿವಾಸ್ ಪ್ರಸಾದ್ ಈ ಕುರಿತು ಸ್ಪಷ್ಟನೆ ನೀಡಿದ್ದಾರೆ. "ಈ ಬಾರಿ ಮಾಗಡಿ ಶ್ರೀರಂಗನಾಥಸ್ವಾಮಿ ಬ್ರಹ್ಮರಥೋತ್ಸವದ ಪ್ರಯುಕ್ತ ನಡೆಯುವ ದನಗಳ ಜಾತ್ರೆ ಹಾಗೂ ಬ್ರಹ್ಮರಥೋತ್ಸವ ರದ್ದುಗೊಳಿಸಲಾಗಿದೆ" ಎಂದು ಹೇಳಿದ್ದಾರೆ.
"ಸಾಮಾಜಿಕ ಜಾಲತಾಣಗಳಲ್ಲಿ ದನಗಳ ಜಾತ್ರೆ ನಡೆಯುತ್ತದೆ ಎಂಬ ಸುದ್ದಿ ಹರಿದಾಡುತ್ತಿದೆ. ಇದನ್ನು ನಂಬಿಕೊಂಡು ದೂರದ ಊರುಗಳಿಂದ ರೈತರು ದನಗಳನ್ನು ಕರೆದುಕೊಂಡು ಬರಬಾರದು" ಎಂದು ತಹಶೀಲ್ದಾರ್ ರೈತರಲ್ಲಿ ಮನವಿ ಮಾಡಿದ್ದಾರೆ.
ಎರಡನೇ ಅಲೆ ಪರಿಣಾಮ ಬೀರಿದ್ದು, ವಿವಿಧ ರಾಜ್ಯಗಳಲ್ಲಿ ಹೊಸ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಜನರು ಹೆಚ್ಚಾಗಿ ಸೇರಿದರೆ ಸೋಂಕು ಹರಡುವ ಸಾಧ್ಯತೆ ಹೆಚ್ಚಿದೆ. ಆದ್ದರಿಂದ ಜಾತ್ರೆ, ಧಾರ್ಮಿಕ ಕಾರ್ಯಕ್ರಮ ಮುಂತಾದವುಗಳಿಗೆ ಅವಕಾಶ ನೀಡಬಾರದು ಎಂದು ಸರ್ಕಾರ ಹೇಳಿದೆ.

0 Comments