Ticker

6/recent/ticker-posts

Ad Code

Responsive Advertisement

ಹಿಂದಿನ ದರಕ್ಕೇ ರಸಗೊಬ್ಬರ ಮಾರಾಟ: ಸಚಿವ ಸದಾನಂದಗೌಡ


ದೇಶಾದ್ಯಂತ ಲಭ್ಯವಿರುವ ಪೋಷಕಾಂಶಯುಕ್ತ ರಸಗೊಬ್ಬರಗಳ ಹಳೆ ದಾಸ್ತಾನನ್ನು ಹಳೆ ದರದಲ್ಲಿಯೇ ಮಾರಾಟ ಮಾಡಲು ರಸಗೊಬ್ಬರ ಉತ್ಪಾದಕರು ಸಮ್ಮತಿಸಿದ್ದಾರೆ ಎಂದು ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಸಚಿವ ಡಿ.ವಿ. ಸದಾನಂದಗೌಡ ತಿಳಿಸಿದ್ದಾರೆ.


ಸೋಮವಾರ ರಾಸಾಯನಿಕ ಹಾಗೂ ರಸಗೊಬ್ಬರ ಖಾತೆಯ ರಾಜ್ಯ ಸಚಿವ ಮನ್ಸುಖ್ ಮಾಂಡವಿಯಾ, ರಸಗೊಬ್ಬರ ಉತ್ಪಾದಕರ ಸಂಘದ ಪ್ರತಿನಿಧಿಗಳು, ಆಮದುದಾರರು, ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದ ಅವರು ಮಂಗಳವಾರ ದೆಹಲಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ, ಇಫ್ಕೋ, ಐಪಿಎಲ್ ನಂತಹ ಪ್ರಮುಖ ಕಂಪನಿಗಳು ಹಳೆ ದರ ಮುಂದುವರಿಸುವ ಬಗ್ಗೆ ಆಯಾ ರಾಜ್ಯ ಕೃಷಿ ಇಲಾಖೆಗಳಿಗೆ ಈಗಾಗಲೇ ಪತ್ರ ಬರೆದಿವೆ ಎಂದರು.

ರಸಗೊಬ್ಬರ ತಯಾರಿಕೆಗೆ ಬೇಕಾಗುವ ಶೇ. 90ರಷ್ಟು ಕಚ್ಚಾವಸ್ತುಗಳನ್ನು ಆಮದು ಮಾಡಿಕೊಳ್ಳಲಾಗುತ್ತದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾವಸ್ತುಗಳ ಬೆಲೆ ತೀವ್ರ ಹೆಚ್ಚಾದ ಕಾರಣ ಇಲ್ಲಿಯೂ ಹೆಚ್ಚಾಗಿತ್ತು. ಸದ್ಯಕ್ಕಂತೂ ರಸಗೊಬ್ಬರ ಕಂಪನಿಗಳು ಹಳೆ ದಾಸ್ತಾನನ್ನು  ಹಳೆ ದರದಲ್ಲಿಯೇ ಮಾರಾಟ ಮಾಡಲು ಒಪ್ಪಿಕೊಂಡಿವೆ. ರಸಗೊಬ್ಬರದ ಪ್ರಮುಖ ಬಳಕೆದಾರರಾದ ಅಮೆರಿಕ, ಬ್ರೆಜಿಲ್, ಐರೋಪ್ಯ ಒಕ್ಕೂಟ ದೇಶಗಳಲ್ಲಿ ಹಂಗಾಮು ಮುಗಿದಿರುವುದರಿಂದ ಬೇಡಿಕೆ ಕುಸಿದು ಬೆಲೆಯೂ ಇಳಿಯತೊಡಗಿದೆ. ಹಾಗಾಗಿ ಬರುವ ದಿನಗಳಲ್ಲಿ ಪರಿಸ್ಥಿತಿ ಇನ್ನಷ್ಟು ಸುಧಾರಿಸುವ ವಿಶ್ವಾಸವಿದೆ ಎಂದು ಹೇಳಿದರು.

ದೇಶದಲ್ಲಿ ಎಲ್ಲಾ ನಮೂನೆಯ ರಸಗೊಬ್ಬರಗಳು ಸಾಕಷ್ಟು ದಾಸ್ತಾನು ಇವೆ. ಮುಂಗಾರು ಹಂಗಾಮಿನಲ್ಲಿ ಯಾವುದೇ ರೀತಿಯಲ್ಲಿ ರಸಗೊಬ್ಬರ ಕೊರತೆ ಆಗದಂತೆ ನೋಡಿಕೊಳ್ಳಲಾಗುವುದು. ಇದಕ್ಕೆ ಈಗಿನಿಂದಲೇ ಪೂರ್ವಸಿದ್ದತೆ ಮಾಡಿಕೊಳ್ಳಲಾಗಿದೆ ಎಂದರು.

ರಸಗೊಬ್ಬರ ಬೆಲೆ ಏರಿಕೆ ಹಾಗೂ ಸಬ್ಸಿಡಿ ಬಗ್ಗೆ ಕೇಂದ್ರ ಸರ್ಕಾರವನ್ನು ಟೀಕಿಸಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮಾಡಿರುವ ಟ್ವೀಟ್ ಅನ್ನು ಬಾಲಿಶ ಎಂದ ಸದಾನಂದಗೌಡರು, ಮಾಜಿ ಪ್ರಧಾನಿ ಮಗನಾಗಿ, ಮಾಜಿ ಮುಖ್ಯಮಂತ್ರಿಯಾಗಿ ಅವರಿಗೆ ದೇಶದ ರಸಗೊಬ್ಬರ ಬೆಲೆ ಹಾಗೂ ಸರಬರಾಜು ವ್ಯವಸ್ಥೆ ಯಾವ ರೀತಿ ಕಾರ್ಯನಿರ್ವಹಿಸುತ್ತದೆ ಎಂಬುದರ ಪ್ರಾಥಮಿಕ ತಿಳುವಳಿಕೆಯೂ ಇಲ್ಲದಿರುವುದು ಶೋಚನೀಯವಾಗಿದೆ. ಅವರಿಗೆ ಈ ಬಗ್ಗೆ ಏನಾದರು ಮಾಹಿತಿ ಬೇಕಾದರೆ ಕೇಳಲಿ. ನಾವು ಒದಗಿಸುತ್ತೇವೆ ಎಂದು ತಿಳಿಸಿದರು.

ರೈತ ಕಲ್ಯಾಣದ ವಿಚಾರವಾಗಿ ಕೇಂದ್ರ ಸರ್ಕಾರಕ್ಕೆ ಇರುವ ಬದ್ಧತೆಯ ಬಗ್ಗೆ ಯಾರಿಂದಲೂ ಪ್ರಮಾಣ ಪತ್ರ ಬೇಕಾಗಿಲ್ಲ. ರೈತರಿಗೆ ಆದಷ್ಟು ಕಡಿಮೆ ಬೆಲೆಯಲ್ಲಿ ರಸಗೊಬ್ಬರ ಪೂರೈಸಲು ಮೋದಿ ಸರ್ಕಾರ ಬದ್ಧವಾಗಿದೆ. ರಸಗೊಬ್ಬರ ಸಬ್ಸಿಡಿಗಾಗಿ ಭಾರೀ ದೊಡ್ಡ ಮೊತ್ತದ ಹಣವನ್ನು ವ್ಯಯಿಸಲಾಗುತ್ತದೆ. 2019-20ನೇ ಸಾಲಿನಲ್ಲಿ ರಸಗೊಬ್ಬರ ಸಬ್ಸಿಡಿಗಾಗಿ 83,467.85 ಕೋಟಿ ರೂ ಒದಗಿಸಲಾಗಿತ್ತು. ಕಳೆದ ಸಾಲಿನಲ್ಲಿ (2020-21) ಕೊರೊನಾ ಸಂಕಷ್ಟದ ಮಧ್ಯೆಯೂ 1,31,229.51 ಕೋಟಿ ರೂಪಾಯಿ ರಸಗೊಬ್ಬರ ಸಬ್ಸಿಡಿ ನೀಡಲಾಗಿದೆ. ಒಂದೇ ಒಂದು ನಯಾಪೈಸೆ ಸಬ್ಸಿಡಿಯನ್ನೂ ಉಳಿಸಿಕೊಂಡಿಲ್ಲ ಎಂದು ಹೇಳಿದರು.

 ಕೊರತೆ ಇಲ್ಲ: ಕೊರೊನೊ ಚಿಕಿತ್ಸೆಯಲ್ಲಿ ಬಳಸುವ ರೆಮ್ಡೆಸಿವಿರ್ ಲಸಿಕೆಯಲ್ಲಿ ಯಾವುದೇ ಕೊರತೆಯಾಗದಂತೆ ನೋಡಿಕೊಳ್ಳಲಾಗುವುದು. ಅದರ ರಫ್ತನ್ನು ತಕ್ಷಣವೇ ನಿಷೇಧಿಸಲಾಗಿದೆ. ಏಳು ಕಂಪನಿಗಳು ಇದರ ಲೈಸನ್ಸ್ ಹೊಂದಿದ್ದು ಈ ತಿಂಗಳು 28.63 ಲಕ್ಷ ವೈಯಲ್ಸ್ ರೆಮ್ಡೆಸಿವಿರ್ ಉತ್ಪಾದನೆಯಾಗಲಿದೆ. ಸದ್ಯ 2.86 ಲಕ್ಷ ವೈಯಲ್ಸ್ ರೆಮ್ಡೆಸಿವಿರ್ ಸಂಗ್ರಹವಿದೆ. ದೇಶದಲ್ಲಿ ರೆಮ್ಡೆಸಿವಿರ್ ಉತ್ಪಾದನಾ ಸಾಮಥ್ರ್ಯ ತಿಂಗಳೊಂದಕ್ಕೆ 38.8 ಲಕ್ಷ ವೈಯಲ್ಸ್. ಈ ಸಾಮಥ್ರ್ಯವನ್ನು  ಇನ್ನೂ ಹತ್ತು ಲಕ್ಷ ಹೆಚ್ಚಿಸಲಾಗುತ್ತಿದ್ದು ಇದಕ್ಕೆ ಸಂಬಂಧಿಸಿದ ಆರು ಅರ್ಜಿಗಳಿಗೆ ಡಿಸಿಜಿಐ ಈಗಾಗಲೇ ಸಮ್ಮಿತಿ ನೀಡಿದೆ ಎಂದು ವಿವರಿಸಿದರು.

Post a Comment

0 Comments

Ad Code

Responsive Advertisement