ಶಾಲೆ ಆರಂಭ ಹಾಗೂ ಎಸ್ಎಸ್ಎಲ್ ಸಿ ಪರೀಕ್ಷೆ ಕುರಿತು ರಾಜ್ಯ ಜಿಲ್ಲಾಧಿಕಾರಿಗಳ ಜತೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿ ನಡೆಸಿದ ಶಿಕ್ಷಣ ಸಚಿವರು ಬಳಿಕ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದರು. ಎಸ್ ಎಸ್ ಎಲ್ ಸಿ ಪರೀಕ್ಷೆ ದಿನಾಂಕ ಪ್ರಕಟಿಸುವ ಮೂಲಕ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ಈ ಭಾರಿ 8.76 ಲಕ್ಷ ವಿದ್ಯಾರ್ಥಿಗಳು ಎಸ್ಎಸ್ಎಲ್ ಸಿ ಪರೀಕ್ಷೆ ತೆಗೆದುಕೊಂಡಿದ್ದಾರೆ. ಈ ಬಾರಿ 73 ಸಾವಿರ ಕೊಠಡಿಗಳಲ್ಲಿ ಪರೀಕ್ಷೆ ನಡೆಯಲಿದೆ. ವಿದ್ಯಾರ್ಥಿಗಳಿಗೆ ಆತ್ಮ ವಿಶ್ವಾಸ ಹೆಚ್ಚಿಸುವ ಸಲುವಾಗಿ ಪರೀಕ್ಷೆ ನಡೆಸುತ್ತಿದ್ದೇವೆ ಎಂದು ಸುರೇಶ್ ಕುಮಾರ್ ಹೇಳಿದರು.
ಮೂರು ವಿಷಯಗಳಿಗೆ ಒಂದು ಪ್ರಶ್ನೆ ಪತ್ರಿಕೆಯಂತೆ ಜುಲೈ 19 ಮತ್ತು 22 ರಂದು ರಾಜ್ಯದ 73 ಸಾವಿರ ಕೊಠಡಿಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಜುಲೈ 19 ರಂದು ಪರೀಕ್ಷೆ: ಪೂರ್ವ ನಿಗದಿಯಂತೆ ಜುಲೈ 19 ರಂದು ಕೋರ್ ವಿಷಯಗಳಾದ ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ವಿಷಯ ಆಧಾರಿತ ಒಂದು ಪ್ರಶ್ನೆ ಪತ್ರಿಕೆಗೆ ಪರೀಕ್ಷೆ ನಡೆಯಲಿದೆ. ಬೆಳಗ್ಗೆ 10.30 ರಿಂದ 1.30 ರ ವರೆಗೆಗೆ ಪರೀಕ್ಷೆ ನಡೆಯಲಿದೆ.
ಜುಲೈ 22 ರಂದು ಮೂರು ಭಾಷಾ ವಿಷಯಗಳಿಗೆ ಪರೀಕ್ಷೆ ನಡೆಯಲಿದೆ. ತಲಾ ಮೂರು ವಿಷಯಗಳಿಗೆ ಆಧರಿಸಿ ಒಂದು ಪ್ರಶ್ನೆ ಪತ್ರಿಕೆ ನೀಡಲಾಗುವುದು. ಕಳೆದ ವರ್ಷ ಪರೀಕ್ಷೆ ಆಗಿರಲಿಲ್ಲ. ಮಕ್ಕಳ ಹಬ್ಬ ಆಗಿತ್ತು. ಈ ಬಾರಿಯೂ ಮಕ್ಕಳ ಸುರಕ್ಷತೆಗೆ ಆದ್ಯತೆ ನೀಡಿದ್ದೇವೆ. ಅದರಂತೆ ಸುರಕ್ಷಿತವಾಗಿ ಪರೀಕ್ಷೆ ನಡೆಯಲಿದೆ. ಜೂನ್ 30 ರಿಂದ ಪ್ರವೇಶ ಪತ್ರ ಡೌನ್ ಲೋಡ್ ಮಾಡಿಕೊಳ್ಳಬಹುದು ಎಂದು ಸುರೇಶ್ ಕುಮಾರ್ ತಿಳಿಸಿದರು.
ಎಸ್ಎಸ್ಎಲ್ ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸರ್ಜಿಕಲ್ ಮಾಸ್ಕ್, ಬಟ್ಟೆ ಮಾಸ್ಕ್ ಇಲ್ಲವೇ N 95 ಮಾಸ್ಕ್ ಧರಿಸಲು ತಜ್ಞರ ಸಮಿತಿ ಶಿಫಾರಸು ಮಾಡಿದೆ. ಹೀಗಾಗಿ ಪರೀಕ್ಷಾ ಕೇಂದ್ರಕ್ಕೆ ಬರುವ ಎಲ್ಲಾ ವಿದ್ಯಾರ್ಥಿಗಳಿಗೆ ಮಾಸ್ಕ್ ವಿತರಣೆ ಮಾಡಲಾಗುವುದು. ಸಾಮಾಜಿಕ ಅಂತರ ಕಾಯ್ದುಕೊಳ್ಳಲಾಗುವುದು. ಎಲ್ಲಾ ರೀತಿಯ ಸುರಕ್ಷತಾ ಕ್ರಮ ಕೈಗೊಳ್ಳಲಾಗಿದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.
ಎಸ್ಎಸ್ಎಲ್ ಸಿ ಪರೀಕ್ಷಾ ಕೇಂದ್ರದ 200 ಮೀಟರ್ ಸುತ್ತಮುತ್ತ ನಿಷೇಧಾಜ್ಞೆ ಜಾರಿ ಮಾಡಲಾಗುವುದು. ಪ್ರಶ್ನೆ ಪತ್ರಿಕೆ ಲೀಕ್ ಬಗ್ಗೆ ಯಾರೂ ತಲೆ ಕೆಡಿಸಿಕೊಳ್ಳಬಾರದು. ಪ್ರಶ್ನೆ ಪತ್ರಿಕೆ ಸುರಕ್ಷತೆ, ಭದ್ರತೆ ಕುರಿತು ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಹೀಗಾಗಿ ಈ ಭಾರಿಯ ಪರೀಕ್ಷೆ ಬಗ್ಗೆ ವಿದ್ಯಾರ್ಥಿಗಳು, ಪೋಷಕರು ಗೊಂದಲಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಸಚಿವರು ತಿಳಿಸಿದರು.

0 Comments