ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಸರ್ವ ಪಕ್ಷ ಸಭೆ ಕರೆದಿರುವ ಹಿನ್ನೆಲೆ ಕಣಿವೆ ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಮತ್ತೆ ಗರಿಗೆದರಿವೆ. ಜಮ್ಮು-ಕಾಶ್ಮೀರದಲ್ಲಿ ಮತ್ತು ಗಡಿ ನಿಯಂತ್ರಣ ರೇಖೆಯಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ.
ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವುದು ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚಿಸುವುದಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಸರ್ವಪಕ್ಷ ಸಭೆ ನಡೆಸಲಾಗುತ್ತಿದೆ.
ಜಮ್ಮು-ಕಾಶ್ಮೀರದ ಪ್ರಸ್ತುತ ಪರಿಸ್ಥಿತಿ, ಕೊರೊನಾವೈರಸ್ ಸೋಂಕಿನ ನಿರ್ವಹಣೆ, 370 ವಿಧಿ ರದ್ದು ಸೇರಿದಂತೆ ಹಲವು ನಿಚಾರಗಳು ಸರ್ವಪಕ್ಷ ಸಭೆಯಲ್ಲಿ ಚರ್ಚೆಗೆ ಬರಲಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಕರೆದ ಸರ್ವಪಕ್ಷ ಸಭೆಯಿಂದಾಗಿ ಇಡೀ ದೇಶದ ಲಕ್ಷ್ಯ ಜಮ್ಮು-ಕಾಶ್ಮೀರದಲ್ಲಿ ನಡೆಯುವ ರಾಜಕೀಯ ಬೆಳವಣಿಗೆಗಳ ಮೇಲೆ ನೆಟ್ಟಿದೆ.
ಜಮ್ಮು ಕಾಶ್ಮೀರದ ಪೀಪಲ್ಸ್ ಅಲೈಯನ್ಸ್ ಫಾರ್ ಗುಪ್ಕರ್ ಡಿಕ್ಲರೇಷನ್ (ಪಿಎಜಿಡಿ), ಕಾಂಗ್ರೆಸ್, ಪಿಡಿಪಿ ಮತ್ತು ಹಲವು ಸ್ಥಳೀಯ ರಾಜಕೀಯ ಪಕ್ಷಗಳಿಗೆ ಸರ್ವಪಕ್ಷ ಸಭೆಗೆ ಆಹ್ವಾನಿಸಲಾಗಿದೆ. ಗುರುವಾರ ನಡೆಯುತ್ತಿರುವ ಸರ್ವಪಕ್ಷ ಸಭೆಯಲ್ಲಿ ಶ್ರೀನಗರದಿಂದ ಬಿಜೆಪಿಯ ಮಾಜಿ ಮಿತ್ರಪಕ್ಷ ಪಿಡಿಪಿಯ ಮೆಹಬೂಬಾ ಮುಫ್ತಿ, ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ, ಮಾಜಿ ಮುಖ್ಯಮಂತ್ರಿ ಗುಲಾಮ್ ನಬಿ ಆಜಾದ್ ಮತ್ತು ಜಮ್ಮು ಕಾಶ್ಮೀರದ ಕಾಂಗ್ರೆಸ್ ಮುಖ್ಯಸ್ಥ ಜಿ.ಎ. ಮೀರ್ ಸೇರಿದಂತೆ ಹಲವು ಸ್ಥಳೀಯ ನಾಯಕರು ಭಾಗವಹಿಸಲಿದ್ದಾರೆ.
ಜಮ್ಮು-ಕಾಶ್ಮೀರದಲ್ಲಿ ಸಂವಿಧಾನದ 370ನೇ ವಿಧಿ ಅಡಿ ವಿಶೇಷ ಸ್ಥಾನಮಾನ ನೀಡಲಾಗಿತ್ತು. ಕಾಶ್ಮೀರದ ರಕ್ಷಣೆ, ವಿದೇಶಾಂಗ ವ್ಯವಹಾರ, ಸಂಪರ್ಕ ಕ್ಷೇತ್ರಗಳು ಕೇಂದ್ರ ಸರ್ಕಾರದ ಅಧೀನಕ್ಕೆ ಒಳಪಟ್ಟರೆ, ಉಳಿದೆಲ್ಲ ಅಧಿಕಾರ ರಾಜ್ಯದಲ್ಲಿ ಉಳಿದಿತ್ತು. ಈ ವಿಧಿಯನ್ನು ಎರಡು ವರ್ಷಗಳ ಹಿಂದೆಯಷ್ಟೇ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ರದ್ದುಗೊಳಿಸಿ, ಜಮ್ಮು ಕಾಶ್ಮೀರದಾದ್ಯಂತ ಬಿಗಿ ಭದ್ರತೆ ಒದಗಿಸಲಾಗಿದ್ದು, ಅಂತರ್ಜಾಲ ಸೇವೆ ಕಡಿತಗೊಳಿಸಲಾಗಿತ್ತು. ಅಲ್ಲದೇ ಹಲವಾರು ರಾಜಕೀಯ ನಾಯಕರನ್ನು ಗೃಹ ಬಂಧನದಲ್ಲಿ ಇರಿಸಿದ್ದು, ರಾಜಕೀಯ ಮೇಲಾಟಕ್ಕೆ ಕಾರಣವಾಗಿತ್ತು.

0 Comments