ನವದೆಹಲಿ, ಜೂನ್ 30: ಕೊರೊನಾ ಸೋಂಕಿನಿಂದ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ನೀಡುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿದೆ. ಪರಿಹಾರ ಮೊತ್ತವನ್ನು ರಾಜ್ಯ ಸರ್ಕಾರಗಳೇ ನಿರ್ಧರಿಸಲಿ ಎಂದು ಕೋರ್ಟ್ ಹೇಳಿದೆ.
ಕೋವಿಡ್ 19ಗೆ ಬಲಿಯಾದ ವ್ಯಕ್ತಿಗಳ ಕುಟುಂಬ ಸದಸ್ಯರಿಗೆ ಪರಿಹಾರ ಪಾವತಿಸಲು ಮಾರ್ಗಸೂಚಿಯನ್ನು ಮುಂದಿನ 6 ವಾರಗಳಲ್ಲಿ ರೂಪಿಸುವಂತೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರಕ್ಕೆ ಸುಪ್ರೀಂಕೋರ್ಟ್ ಬುಧವಾರ ಆದೇಶಿಸಿದೆ.
ನ್ಯಾ.ಅಶೋಕ್ ಭೂಷಣ್ ಅವರಿದ್ದ ತ್ರಿಸದಸ್ಯ ಪೀಠವು ಈ ನಿರ್ಧಾರ ತೆಗೆದುಕೊಂಡಿದೆ, ಕೊರೊನಾ ಸೋಂಕಿನಿಂದ ಮೃತಪಟ್ಟಿರುವ ವ್ಯಕ್ತಿಯ ಕುಟುಂಬ ಸದಸ್ಯರಿಗೆ ಎಷ್ಟು ಪರಿಹಾರ ನೀಡಬೇಕು ಎಂಬುದನ್ನು ಮುಂದಿನ 6 ವಾರಗಳಲ್ಲಿ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಎನ್ಡಿಎಂಎಗೆ ಸೂಚಿಸಲಾಗಿದೆ.
ಕೊರೊನಾ ಸೋಂಕಿನಿಂದ ಮೃತಪಟ್ಟ ಕುಟುಂಬ ಸದಸ್ಯರಿಗೆ ತಲಾ 4 ಲಕ್ಷ ರೂ. ಪರಿಹಾರ ನೀಡಬೇಕು ಎನ್ನುವ ಅರ್ಜಿ ವಿಚಾರಣೆ ಬಳಿಕ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ರಾಜ್ಯ ಸರ್ಕಾರಗಳು ಮೃತ ಕುಟುಂಬಗಳಿಗೆ ಪರಿಹಾರ ನೀಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಅಫಿಡವಿಟ್ ಸಲ್ಲಿಸಿತ್ತು.
ಕೊರೊನಾದಿಂದ ಮೃತರ ಕುಟುಂಬಕ್ಕೆ ತಲಾ 4 ಲಕ್ಷ ರೂಪಾಯಿ ಪರಿಹಾರದ ಅರ್ಜಿ ನೀಡಬೇಕು ಎನ್ನುವ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ವಿಚಾರಣೆ ನಡೆದಿದ್ದು, ಪರಿಹಾರ ನೀಡಲು ಕೇಂದ್ರ, ರಾಜ್ಯಗಳಿಗೆ ನಿರ್ದೇಶನ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಪರಿಶೀಲಿಸಲಾಗಿದೆ. ಆದರೆ, NDRF, SDRF ನಿಧಿಯಿಂದ ಪರಿಹಾರ ನೀಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಅಫಿಡವಿಟ್ ಸಲ್ಲಿಸಿದೆ.
ಜೂನ್ 29 ರಂದು ಅಸಂಘಟಿತ ವಲಯದ ಕಾರ್ಮಿಕರ ನೋಂದಣಿಗೆ ರಾಷ್ಟ್ರೀಯ ಪೋರ್ಟಲ್ ರಚಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಸರ್ವೊಚ್ಛ ನ್ಯಾಯಾಲಯ ಮಹತ್ತರ ಆದೇಶ ನೀಡಿತ್ತು. ಜುಲೈ 31ರ ಒಳಗೆ ಕೇಂದ್ರ ಸರ್ಕಾರ ಪೋರ್ಟಲ್ ಸಿದ್ಧಪಡಿಸಲು ಕ್ರಮ ಕೈಗೊಳ್ಳಬೇಕು. ಅಸಂಘಟಿತ ವಲಯದ ಕಾರ್ಮಿಕರ ನೋಂದಣಿ ಪ್ರಕ್ರಿಯೆಗೆ ರಾಷ್ಟ್ರೀಯ ಪೋರ್ಟಲ್ ಮಾಡಬೇಕು.

0 Comments