ಬೆಂಗಳೂರು: ಸಿದ್ದರಾಮಯ್ಯನವರೇ ಮುಂದಿನ ಮುಖ್ಯಮಂತ್ರಿ ಎಂದು ಹೇಳಿಕೆ ನೀಡಿದ್ದ ಜಮೀರ್ ಅಹಮದ್ ಖಾನ್ ಮತ್ತು ರಾಘವೇಂದ್ರ ಹಿಟ್ನಾಳ್ ಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಪರೋಕ್ಷ ಎಚ್ಚರಿಕೆ ನೀಡಿದ್ದಾರೆ.
ರಾಜ್ಯ ಕಾಂಗ್ರೆಸ್ನಲ್ಲಿ ಮುಂದಿನ ಮುಖ್ಯಮಂತ್ರಿ ಯಾರು ಎಂಬ ವಿಚಾರ ತಾರಕಕ್ಕೇರಿದೆ. ಕೆಲ ಶಾಸಕರು ಮುಂದಿನ ಸಿಎಂ ಸಿದ್ದರಾಮಯ್ಯ ಎಂದು ಬಹಿರಂಗ ಹೇಳಿಕೆ ನೀಡುತ್ತಿರುವುದು, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕಣ್ಣು ಕೆಂಪಾಗಿಸಿದೆ.
ಮುಖ್ಯಮಂತ್ರಿ ಹುದ್ದೆ ಕುರಿತ ಸಂಘರ್ಷಕ್ಕೆ ಅಂತ್ಯ ಹಾಡಬೇಕು. ಪಕ್ಷದ ಸಂಘಟನೆಗೆ ಒತ್ತು ಕೊಡುವುದರ ಜತೆಗೆ ಬಿಜೆಪಿ ಸರ್ಕಾರದ ಜನ ವಿರೋಧಿ ನೀತಿ ವಿರುದ್ಧ ಪ್ರಬಲ ಹೋರಾಟ ನಡೆಸಬೇಕು ಎಂದು ರಾಜ್ಯ ಕಾಂಗ್ರೆಸ್ ನಾಯಕರಿಗೆ ಪಕ್ಷದ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ತಾಕೀತು ಮಾಡಿದ್ದಾರೆ.
ಪಕ್ಷದ ಪದಾಧಿಕಾರಿಗಳ ಪಟ್ಟಿ ಪುನರ್ರಚನೆ ಬಯಸಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ದೆಹಲಿಗೆ ತೆರಳಿದ್ದಾರೆ. ಇದೇ ಸಂದರ್ಭದಲ್ಲಿ ಸಿಎಂ ಹುದ್ದೆಗೂ ಮೊದಲು ಪಕ್ಷವನ್ನು ಅಧಿಕಾರಕ್ಕೆ ತರಲು ಸಂಘಟಿತರಾಗಿ ಕೆಲಸ ಮಾಡಬೇಕು ಎಂಬ ಸಂದೇಶವನ್ನು ಸುರ್ಜೇವಾಲ ರವಾನಿಸಿದ್ದಾರೆ.
ಹಾಲಿ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರೇ ಮುಂದಿನ ಸಿಎಂ ಆಗಬೇಕೆಂದು ಶಾಸಕರಾದ ಜಮೀರ್ ಅಹ್ಮದ್ ಖಾನ್, ರಾಘವೇಂದ್ರ ಹಿಟ್ನಾಳ್ ಹೇಳಿಕೆ ನೀಡಿದ್ದರು. ಸಿದ್ದರಾಮಯ್ಯ ಆಪ್ತ ವಲಯದ ಇನ್ನೂ ಕೆಲವರು ಇದಕ್ಕೆ ದನಿಗೂಡಿಸಿದ್ದರು. ಈ ಹಿನ್ನೆಲೆಯಲ್ಲಿ ಹೈಕಮಾಂಡ್ ಮಧ್ಯ ಪ್ರವೇಶಿಸಿದೆ.
ಸುರ್ಜೇವಾಲಾ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಲು ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ ನಿರಾಕರಿಸಿದ್ದಾರೆ. ಇನ್ನೂ ಸುರ್ಜೇವಾಲಾ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವುದು ನಮ್ಮ ಪ್ರಥಮ ಆದ್ಯತೆಯಾಗಿದೆ, ಸಾಮೂಹಿಕ ನಾಯಕತ್ವದಲ್ಲಿ ನಾನು ನಂಬಿಕೆಯಿಟ್ಟಿದ್ದೇನೆ, ಮುಂದಿನ ಸಿಎಂ ಯಾರೂ ಎಂಬ ಬಗ್ಗೆ ಹೈಕಮಾಂಡ್ ನಿರ್ಧರಿಸುತ್ತದೆ, ನಮಗೆ ಪಕ್ಷದ ಶಿಸ್ತು ಪ್ರಾಥಮಿಕವಾಗಿದೆ, ಇದನ್ನು ಎಲ್ಲಾ ನಾಯಕರು ಅರ್ಥ ಮಾಡಿಕೊಳ್ಳಬೇಕೆಂದು ಹೇಳಿದ್ದಾರೆ.
ಮುಂದಿನ ಸಿಎಂ ಸಿದ್ದರಾಮಯ್ಯರೇ ಎಂಬ ಜಮೀರ್ ಅಹ್ಮದ್ ಹೇಳಿಕೆ ವಿಚಾರವಾಗಿ ಮಾತನಾಡಿದ ಜಿ.ಪರಮೇಶ್ವರ್, ಅದು ಜಮೀರ್ ಅವರ ವೈಯಕ್ತಿಕ ಅಭಿಪ್ರಾಯ ಅಂತಾ ಮಾಜಿ ಸಿಎಂ ಸಿದ್ದರಾಮಯ್ಯನವರೇ ಹೇಳಿದ್ದಾರೆ. ಹಾಗಾಗಿ ನಮ್ಮ ಜೊತೆ ಯಾರು ಫಾಲೊವರ್ಸ್ ಇರುತ್ತಾರೆ ಅಂತವರಿಗೆ ಕೆಲವು ಆಸೆಗಳಿರುತ್ತವೆ. ಅವರು ನಮ್ಮ ನಾಯಕರು ಹೀಗೆ ಆಗಬೇಕು, ಹಾಗೆ ಆಗಬೇಕು ಎಂಬ ಆಸೆ ಇರುತ್ತೆ. ಅದಕ್ಕೆ ಯಾವಾಗಲು ಸಿದ್ದರಾಮಯ್ಯನವರ ಜೊತೆ ಇರುವ ಜಮೀರ್ ಅವರಿಗೆ ಈ ಆಸೆ ಇದೆ. ಕೆಲವೊಮ್ಮೆ ನಾನೂ ಸಿಎಂ ಆಗಬೇಕು ಎಂಬ ಆಸೆ ನಮ್ಮ ಬೆಂಬಲಿಗರದ್ದಾಗಿರುತ್ತದೆ ಎಂದು ಹೇಳಿದ್ದಾರೆ.
clickhere to read
MALLESWARAM SUTTHA MUTTHA - VARTHAJALA SUPPLIMENT PUBISHED FROM MALLESWARM DAILY
https://www.varthajala.live/2021/06/22nd-june-2021-varthajala.html

0 Comments