ಬೆಂಗಳೂರು (ಜೂನ್ 21); ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ದೇಶಾದ್ಯಂತ ಸಂಚಲನ ಮೂಡಿಸಿತ್ತು.
ರಮೇಶ್ ಜಾರಕಿಹೊಳಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅಲ್ಲದೆ, ಪ್ರಕರಣವನ್ನು ಎಸ್ಐಟಿ ತನಿಖೆಗೂ ವಹಿಸಲಾಗಿತ್ತು. ಆದರೆ, ಸೆಕ್ಷನ್ 377 ರ ಅಡಿಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದ್ದರೂ, ಆ ಸಿಡಿಯಲ್ಲಿರುವುದು ತಾನೇ ಎಂದು ಸ್ವತಃ ರಮೇಶ್ ಜಾರಕಿಹೊಳಿ ಒಪ್ಪಿಕೊಂಡಿದ್ದರೂ ಸಹ ಎಸ್ಐಟಿ ಅಧಿಕಾರಗಳು ಈವರೆಗೆ ಅವರನ್ನು ಬಂಧಿಸಿಲ್ಲ. ಹೀಗಾಗಿ ರಾಜ್ಯ ಸರ್ಕಾರ ಮತ್ತು ಎಸ್ಐಟಿ ಈ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸುತ್ತಿದೆಯೇ ಎಂಬ ಪ್ರಶ್ನೆ ಉದ್ಭವಿಸುತ್ತಿದೆ. ಈ ನಡುವೆ ಪ್ರಕರಣಕ್ಕೆ ಎಂಟ್ರಿ ಕೊಟ್ಟಿರುವ ಲಿಂಗ ಸಮಾನತೆ, ಮಾನವ ಹಕ್ಕುಗಳಿಗಾಗಿ ಹೋರಾಟ ಮಾಡುವಲ್ಲಿ ಅಂತಾರಾಷ್ಟ್ರೀಯ ಖ್ಯಾತಿ ಗಳಿಸಿರುವ ಪದ್ಮಶ್ರೀ ಪುರಸ್ಕೃತ ವಕೀಲೆ ಇಂದಿರಾ ಜೈಸಿಂಗ್ ತಾನು ಸಂತ್ರಸ್ತ ಯುವತಿಯ ಪರ ಕೋರ್ಟ್ನಲ್ಲಿ ಹಾಜರಾಗುವುದಾಗಿ ತಿಳಿಸಿದ್ದಾರೆ. ಅಲ್ಲದೆ, ಎಸ್ಐಟಿ ಈ ಪ್ರಕರಣವನ್ನು ಮುಚ್ಚಿಹಾಕಲು ನಾನು ಬಿಡುವುದಿಲ್ಲ" ಎಂದು ಎಚ್ಚರಿಕೆ ಸಂದೇಶ ನೀಡಿದ್ದಾರೆ.
ಎಸ್ಐಟಿ ತನಿಖೆ ನಿರ್ಣಾಯಕ ಹಂತ ತಲುಪಿರುವ ಬೆನ್ನಲ್ಲೇ, ಜೂನ್ 23 ರಂದು ಪ್ರಕರಣ ಯಾವ ಸ್ವರೂಪ ಪಡೆಯಲಿದೆ ಎಂಬುದು ಕುತೂಹಲ ಕೆರಳಿಸಿದೆ. ಇಂದಿರಾ ಅವರು ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ವಕಾಲತ್ತು ವಹಿಸುತ್ತಿರುವುದು ಪೊಲೀಸ್ ವಲಯದಲ್ಲಿ ಮತ್ತು ರಾಜಕೀಯ ವಲಯದಲ್ಲಿ ಚರ್ಚೆಗೆ ನಾಂದಿ ಹಾಡಿದೆ.
"ವಿಶೇಷ ತನಿಖಾ ತಂಡ ಸ್ವತಂತ್ರವಾಗಿ ತನಿಖೆ ನಡೆಸುತ್ತಿಲ್ಲ. ಹೀಗಾಗಿ, ಹೈಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕು. ಸಿಬಿಐ ತನಿಖೆ ನಡೆಸಬೇಕು ಎಂದು ಸಂತ್ರಸ್ತ ಯುವತಿ ಈ ಹಿಂದೆ ಅರ್ಜಿ ಸಲ್ಲಿಸಿದ್ದರು. ಏಕ ಸದಸ್ಯ ಪೀಠದ ಮುಂದೆ ಸಲ್ಲಿಸಿರುವ ಎಲ್ಲಾ ಅರ್ಜಿಗಳನ್ನು ಒಟ್ಟಿಗೆ ವಿಚಾರಣೆ ನಡೆಸಬೇಕು" ಎಂದು ಅರ್ಜಿದಾರರ ಪರ ವಕೀಲರಾದ ಇಂದಿರಾ ಜೈಸಿಂಗ್ ಕೋರಿದ್ದಾರೆ.
ರಾಜ್ಯ ರಾಜಕಾರಣದಲ್ಲಿ ಸಂಚನಲ ಮೂಡಿಸಿ, ಅತ್ಯಾಚಾರ ಆರೋಪಿ ರಮೇಶ್ ಜಾರಕಿಹೊಳಿ ರಾಜೀನಾಮೆಗೆ ಕಾರಣವಾಗಿದ್ದ ಸಿಡಿ ಪ್ರಕರಣ ಇಂದಿರಾ ಜೈಸಿಂಗ್ ಆಗಮನದಿಂದ ಮತ್ತೆ ಹೊಸ ಆರಂಭ ಪಡೆಯಲಿದೆ ಎಂದು ಹೇಳಲಾಗುತ್ತಿದೆ.
ಮಾನವ ಹಕ್ಕುಗಳ ರಕ್ಷಣೆ ವಿಚಾರದಲ್ಲಿ ಇಂದಿರಾ ಜೈಸಿಂಗ್ ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಗಳಿಸಿದ್ದಾರೆ. ಅಡಿಷನಲ್ ಸಾಲಿಸಟರ್ ಜನರಲ್ ಹುದ್ದೆ ಅಲಂಕರಿಸಿದ ಪ್ರಥಮ ಮಹಿಳಾ ವಕೀಲರು ಎಂಬ ಕೀರ್ತಿ ಕೂಡ ಇವರಿಗೆ ಇದೆ

0 Comments