ವಿಧಾನಸಭೆ ಚುನಾವಣೆಗೆ ಇನ್ನೂ ಎರಡು ವರ್ಷಗಳ ಅವಧಿಯಿದೆ. ಆದರೆ ಎರಡೂ ರಾಷ್ಟ್ರೀಯ ಪಕ್ಷಗಳಲ್ಲಿ 'ಮುಖ್ಯಮಂತ್ರಿ' ಹುದ್ದೆಯ ಬಗ್ಗೆ ಹೇಳಿಕೆ-ಪ್ರತಿ ಹೇಳಿಕೆಗಳು ಜೋರಾಗಿಯೆ ನಡೆದಿವೆ.
ಸಿದ್ದರಾಮಯ್ಯ ಅವರು ಮುಂದಿನ ಮುಖ್ಯಮಂತ್ರಿ ಎಂದು ಕಾಂಗ್ರೆಸ್ ಪಕ್ಷದ 10ಕ್ಕೂ ಹೆಚ್ಚು ಶಾಸಕರು ಬಹಿರಂಗ ಹೇಳಿಕೆ ಕೊಟ್ಟಿದ್ದಾರೆ. ಕಾಂಗ್ರೆಸ್ ಶಾಸಕರ ಹೇಳಿಕೆಗಳು ರಾಜ್ಯ ಕಾಂಗ್ರೆಸ್ ನಾಯಕರಿಗೆ ತಲೆನೋವಾಗಿವೆ. ಮುಂದಿನ ಸಿಎಂ ಚರ್ಚೆ ಪಕ್ಷದಲ್ಲಿ ಹೆಚ್ಚಾಗುತ್ತಿದ್ದಂತೆಯೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ.
"ಸಿಎಂ ಆಗುವ ಆತುರದಲ್ಲಿ ನಾನಿಲ್ಲ. ನನ್ನ ಗುರಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದಷ್ಟೇ. ವಿಧಾನಸೌಧದಲ್ಲಿ ಅಧಿಕಾರ ಹಿಡಿಯಲು ನನ್ನನ್ನು ಚಪ್ಪಡಿ ಕಲ್ಲಿನ ಮೆಟ್ಟಿಲು ಮಾಡಿಕೊಳ್ಳಿ ಅಂತಾ ನಾನೇ ಹೇಳಿದ್ದೇನೆ" ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಬೆಂಬಲಿಗ ಶಾಸಕರಿಗೆ ತಿರುಗೇಟು ಕೊಟ್ಟಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ಕೊಟ್ಟಿರುವ ಅವರು, "ಬಿಜೆಪಿ ಸಮಸ್ಯೆಗೂ, ಕಾಂಗ್ರೆಸ್ ವಿಚಾರಕ್ಕೂ ಬಹಳಷ್ಟು ವ್ಯತ್ಯಾಸವಿದೆ. ಈಗ ನಮ್ಮಲ್ಲಿ ಯಾವ ಕುರ್ಚಿಯೂ ಖಾಲಿ ಇಲ್ಲ. ಈಗ ನಮ್ಮ ರೇಸ್ ಏನಿದ್ದರೂ ಬಿಜೆಪಿಯನ್ನು ಅಧಿಕಾರದಿಂದ ಇಳಿಸಿ, ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದಾಗಿದೆ. ಅದಕ್ಕೆ ನಾವು ಸಮಯ ನೀಡಬೇಕು. ಅದನ್ನು ಬಿಟ್ಟು ಬೇರೆ ವಿಚಾರಕ್ಕೆ ಸಮಯ ನೀಡಿದರೆ ಅದು ವ್ಯರ್ಥವಾಗುತ್ತದೆ" ಎಂದರು.
"ಮಾಜಿ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಚುನಾವಣೆಗೆ ಹೋದರೆ ಮಾತ್ರ ಗೆಲುವು ಸಾಧ್ಯ. ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸಿದರೆ ಮಾತ್ರ ಕಾಂಗ್ರೆಸ್ ಪಕ್ಷಕ್ಕೆ" ಎಂದು ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರು ಹೇಳಿದ್ದರು. "ಜೊತೆಗೆ ಡಿ.ಕೆ. ಶಿವಕುಮಾರ್ ಅವರಿಗೆ ವಯಸ್ಸಿದೆ, ಸಿದ್ದರಾಮಯ್ಯ ಅವರು 2023ಕ್ಕೆ ಮುಖ್ಯಮಂತ್ರಿ ಆಗಲಿ, ನಂತರ ಡಿ.ಕೆ. ಶಿವಕುಮಾರ್ ಆಗಲಿ" ಎಂದು ಮತ್ತೊಬ್ಬ ಕಾಂಗ್ರೆಸ್ ಶಾಸಕ ರಾಮಪ್ಪ ಅವರು ಹೇಳಿಕೆ ಕೊಟ್ಟಿದ್ದರು.
ಆ ಬಗ್ಗೆ ಪ್ರತಿಕ್ರಿಯೆ ಕೊಟ್ಟಿರುವ ಡಿಕೆಶಿ ಅವರು, "ಸಿಎಂ ಆಗಬೇಕೆಂಬ ಆತುರವಿದೆ ಎಂದು ನಾನು ಯಾವತ್ತಾದರೂ ಹೇಳಿದ್ದೀನಾ? ನನ್ನ ಗುರಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದು. ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು, ವಿಧಾನಸೌಧದ ಮೂರನೇ ಮಹಡಿ ಏರಲು ನನ್ನನ್ನು ಮೆಟ್ಟಿಲಾಗಿ ಬಳಸಿಕೊಳ್ಳಿ ಅಂತಾ ನಾನು ಹೇಳಿದ್ದೇನೆ. ಯಾರ್ಯಾರು ಏನೇನು ಸಲಹೆ ಕೊಡುತ್ತಾರೋ, ಕೊಡಲಿ ಅದನ್ನು ಸ್ವೀಕರಿಸೋಣ" ಎಂದು ಪರೋಕ್ಷ ತಿರುಗೇಟು ಕೊಟ್ಟಿದ್ದಾರೆ.
ಶಾಸಕರ ಇಂತಹ ಹೇಳಿಕೆಗಳಿಂದ ಗೊಂದಲ ಸೃಷ್ಟಿಯಾಗುವ ಕುರಿತು ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಅವರು ಸ್ಪಷ್ಟನೆ ಕೊಟ್ಟಿದ್ದಾರೆ. "ಈ ವಿಚಾರವಾಗಿ ನಮ್ಮ ಪಕ್ಷದ ಹೈಕಮಾಂಡ್ ಏನು ಹೇಳಬೇಕೋ ಅದನ್ನು ಹೇಳಿದೆ. ಶಾಸಕರು ಹೇಳಿಕೆ ನೀಡುತ್ತಿದ್ದಾರೆ ಅಂತಾ ನೀವು ಹೇಳಿದ್ದೀರಿ, ನಾನೂ ಕೆಲವು ನೋಡಿದ್ದೇನೆ. ಶಾಸಕರ ಹೇಳಿಕೆಗಳನ್ನು ಶಾಸಕಾಂಗ ಪಕ್ಷದ ನಾಯಕರು ನೋಡಿಕೊಳ್ಳುತ್ತಾರೆ. ಅವರು ನೋಡಿಕೊಳ್ಳದಿದ್ದರೆ, ಆ ಬಗ್ಗೆ ಗಮನ ಹರಿಸಲು ಕಾಂಗ್ರೆಸ್ ಪಕ್ಷ ಬದುಕಿದೆ" ಎಂದು ಸಿದ್ದರಾಮಯ್ಯ ಅವರ ಬೆಂಬಲಿಗೆ ಶಾಸಕರಿಗೆ ಎಚ್ಚರಿಕೆ ನೀಡಿದ್ದಾರೆ.
ಶಾಸಕರ ಹೇಳಿಕೆಗಳಿಗೆ ವಿಪಕ್ಷ ನಾಯಕರೂ ಆಗಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಕಡಿವಾಣ ಹಾಕಬೇಕು. ಅವರು ಹಾಕದಿದ್ದರೆ ಪಕ್ಷದಿಂದ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂಬರ್ಥದಲ್ಲಿ ಡಿ.ಕೆ. ಶಿವಕುಮಾರ್ ಅವರು ಹೇಳಿಕೆ ಕೊಟ್ಟಿದ್ದಾರೆ.

0 Comments