ಮುಂದೇನಾಗುತ್ತೆ ಎಂದು ಹೇಳಲು ನಾನೇನು ಜೋತಿಷಿಯೇ…?
ಬೆಂಗಳೂರು: ಮುಂದಿನ ದಿನಗಳಲ್ಲಿ ಏನಾಗುತ್ತದೆ ಎಂಬುದನ್ನು ಹೇಳಲು ನಾನು ಜೋತಿಷಿ ಅಲ್ಲ ಎಂದು ಉಪ ಮುಖ್ಯಮಂತ್ರಿ ಅಶ್ವತ್ಥ ನಾರಾಯಣ ತಿಳಿಸಿದ್ದಾರೆ. ರೋಟರಿ ಬಿಜಿಎಸ್ ಆಸ್ಪತ್ರೆ( ಕೋವಿಡೇತರ) ರಾಮನಗರದಲ್ಲಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಮಾತನಾಡಿರು, ನಮ್ಮ ಪಕ್ಷದ ನಾಯಕತ್ವ ಬದಲಾವಣೆ ಸಂಬಂಧ ನಾನು ಏನನ್ನು ಹೇಳುವುದಿಲ್ಲ. ಈಗಾಗಲೇ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸ್ಪಷ್ಟವಾಗಿ ಹೇಳಿದ್ದಾರೆ. ಅರುಣ್ ಸಿಂಗ್ ಅವರ ಭೇಟಿ ಹಾಗೂ ಸಭೆಗೆ ವಿಶೇಷ ಅರ್ಥ ಕಲ್ಪಿಸುವ ಅವಗತ್ಯವಿಲ್ಲಎಂದಿದ್ದಾರೆ.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಮಾಲೋಚನೆ ನಡೆಯುತ್ತಲೇ ಇರುತ್ತದೆ. ಸರ್ಕಾರ ಉತ್ತಮವಾಗಿ ಕೆಲಸ ಮಾಡುವುದು. ಪಕ್ಷವನ್ನು ಬಲಿಷ್ಠವಾಗಿ ಮುನ್ನಡೆಸುವುದು, ಜನಾಭಿಪ್ರಾಯ ಸಂಗ್ರಹಿಸುವುದು, ಜನರ ಬಳಿ ವಿಶ್ವಾಸ ಹೆಚ್ಚಿಸಿಕೊಳ್ಳುವುದು. ಹೀಗೆ ಇನ್ನಿತರ ವಿಷಯಗಳ ಬಗ್ಗೆ ಚರ್ಚೆ ನಡೆದಿದೆ ಎಂದರು.
ನಾಯಕತ್ವ ಬದಲಾವಣೆ ಕುರಿತು ಚರ್ಚೆಯೇ ಇಲ್ಲ. ಅಭಿವೃದ್ಧಿ ವಿಚಾರಗಳ ಬಗ್ಗೆ ಅಷ್ಟೆ ಚರ್ಚೆಯಾಗಿದೆ. ನಾವು ಅಧಿಕಾರ ಪಡೆದಿರುವುದೇ ಜನರ ಸೇವೆಗೆ. ಇನ್ನು ಸಚಿವರಾದ ಸಿ.ಪಿ. ಯೋಗೇಶ್ವರ್ ಮತ್ತು ಕೆ.ಎಸ್.ಈಶ್ವರಪ್ಪ ಅವರ ಹೇಳಿಕೆ ಕುರಿತಂತೆ ಅವರನ್ನೇ ಕೇಳಿ ಎಂದರು.
ಮುಂದಿನ ಚುನಾವಣೆಗೆ ಪಕ್ಷದ ಮೂಲಕವೇ ಮತಯಾಚನೆ ನಡೆಸುತ್ತೆವೆ. ನಮ್ಮ ಬಿಜೆಪಿ ಪಕ್ಷಕ್ಕೆ ಅಷ್ಟು ಶಕ್ತಿ ಇದೆ. ಮುಂದಿನ ಹಾದಿಗಳ ಬಗ್ಗೆ ಪಕ್ಷವೇ ಹೇಳಲಿದೆ. ಪಕ್ಷದಲ್ಲಿ ಯಾವುದೇ ಗೊಂದಲ ಇದ್ದರೂ, ಪರಿಹಾರವಾಗುತ್ತದೆ. ಈ ಬಗ್ಗೆ ಹೆಚ್ಚಿನ ಸ್ಪಷ್ಟತೆ ಬೇಕಿದ್ದರೆ ರಾಷ್ಟ್ರೀಯ ಪ್ರಧಾನ ಕಾರ್ಯರ್ಶಿಗಳನ್ನೇ ಕೇಳಿ ಎಂದು ಅವರು ತಿಳಿಸಿದರು.
ಪರಮಪೂಜ್ಯ ಡಾ.ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರು, ಶ್ರೀ ಶ್ರೀ ಡಾ.ಪ್ರಕಾಶನಾಥ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ರಾಮನಗರದ ರೋಟರಿ ಗ್ಲೋಬಲ್ ಆಸ್ಪತ್ರೆಯ ಉದ್ಘಾಟನೆ ನೆರವೇರಿತು.
ಶ್ರೀ ಶ್ರೀ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಅವರ ನೇತೃತ್ವದಲ್ಲಿ ಉತ್ತಮ ಆರೋಗ್ಯ ವ್ಯವಸ್ಥೆ ನೀಡುವ ನಿಟ್ಟಿನಲ್ಲಿ ಆಸ್ಪತ್ರೆ ಆರಂಭಿಸಲಾಗಿತ್ತು.ಈ ಆಸ್ಪತ್ರೆಯನ್ನು ಇನ್ನೂ ಉತ್ತಮವಾಗಿ ಸಜ್ಜುಗೊಳಿಸಿ, ಎಲ್ಲ ರೀತಿಯ ಆರೋಗ್ಯ ವ್ಯವಸ್ಥೆ ಕಲ್ಪಿಸಿದ್ದಾರೆ. ಆರೋಗ್ಯ ಸೌಲಭ್ಯ ಒದಗಿಸಲು ಸರ್ಕಾರ ಎಂದೆಂದಿಗೂ ಕೈಜೋಡಿಸಲಿದೆ.
ರಾಮನಗರ ಜಿಲ್ಲೆಯಲ್ಲಿ ಒಂದು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸುವಂತೆ ಸ್ವಾಮೀಜಿ ಅವರಲ್ಲಿ ಸರ್ಕಾರದ ಪರವಾಗಿ ಮನವಿ ಮಾಡಿದ್ದೇನೆ. ಎಂದರು.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಾಯಕತ್ವದಲ್ಲಿ ಸರ್ಕಾರ ಮತ್ತು ನಮ್ಮ ಪಕ್ಷ ನಡೆಯುತ್ತಿದ್ದು, ನಾನು ಸಹ ಅವರ ಸಂಪುಟದಲ್ಲೇ ಇದ್ದೇನೆ. ಸಚಿವ ಸಂಪುಟ ಪುನರ್ ರಚನೆ ಬಗ್ಗೆ ಈಗ ಏನೆ ಹೇಳಿದರೂ ಗೊಂದಲ ಸೃಷ್ಟಿಯಾಗುತ್ತದೆ. ಹೀಗಾಗಿ ನಾನು ಏನನ್ನು ಹೇಳುವುದಿಲ್ಲ ಎಂದರು.
ಈಗಾಗಲೇ ಪಕ್ಷದ ವರಿಷ್ಠರು ಹೇಳಿರುವ ಮಾತುಗಳನ್ನು ನಾನು ಮತ್ತೆ ಮತ್ತೆ ಮಾತನಾಡುವುದಿಲ್ಲ.ಯಾವಾಗಲು ಸ್ಪರ್ಧೆ ಇರಬೇಕು. ಆಸೆ ಇರಬೇಕು. ಇಂದು ಉಸ್ತುವಾರಿ ಸಚಿವನಾಗಿ ನಾನಿರುತ್ತೇನೆ. ಮುಂದೆ ಇನ್ಯಾರೊ ಇರುತ್ತಾರೆ ಇದರಲ್ಲಿ ತಪ್ಪೇನು ಎಂದು ಜಿಲ್ಲಾ ಉಸ್ತುವಾರಿ ಕುರಿತಂತೆ ಡಿಸಿಎಂ ಪ್ರತಿಕ್ರಿಯಿಸಿದರು.
ಸಧ್ಯಕ್ಕೆ ನನಗೆ ರಾಮನಗರ ಜಿಲ್ಲೆಯ ಉಸ್ತುವಾರಿಯಾಗಿ ನಿರ್ವಹಿಸುತ್ತಿದ್ದೆನೆ. ನಾನು ಜಿಲ್ಲೆಗೆ ಬರಬಾರದು ಎಂದಾದರೆ ಹೇಳಿ... ? ಎಂದು ಪತ್ರಕರ್ತರನ್ನು ಪ್ರಶ್ನಿಸಿದ್ದಾರೆ.
ಮುಂದಿನ ಚುನಾವಣೆಯಲ್ಲಿ ಮಾಗಡಿಯಿಂದ ಸ್ಪರ್ಧಿಸುವ ಯಾವುದೇ ಉದ್ದೇಶ ನನಗೆ ಇಲ್ಲ. ಚುನಾವಣೆಗಾಗಿ ನಾನು ಕೆಲಸ ಮಾಡುತ್ತಿಲ್ಲ. ಜಿಲ್ಲೆಯಲ್ಲಿ ನಿಸ್ವಾರ್ಥವಾಗಿ ಕೆಲಸ ಮಾಡುತ್ತಿದ್ದೆನೆ. ನಾನು ಮಲ್ಲೆಶ್ವರಂ ಕ್ಷೇತ್ರದಲ್ಲಿ ಭದ್ರವಾಗಿದ್ದೆನೆ ಎಂದು ಸ್ಪಷ್ಟ ಪಡಿಸಿದರು.




0 Comments