ಗುಂಡ್ಲುಪೇಟೆ ತಾಲ್ಲೂಕಿನ ಬೋಮ್ಮಲಾಪುರ ಗ್ರಾಮದ ಬಿಜೆಪಿ ಕಾರ್ಯಕರ್ತ, ಯಡಿಯೂರಪ್ಪ ಅವರ ಅಭಿಮಾನಿ ರವಿ ಎಂಬುವವರು ಸೋಮವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬೆಂಬಲಿಗನ ಆತ್ಮಹತ್ಯೆಗೆ ಬೇಸರ ವ್ಯಕ್ತಪಡಿಸಿ ಟ್ವೀಟ್ ಮಾಡಿರುವ ಯಡಿಯೂರಪ್ಪ ಅವರು, ’ನನ್ನ ರಾಜೀನಾಮೆಯಿಂದ ಮನನೊಂದು ಗುಂಡ್ಲುಪೇಟೆ ತಾಲ್ಲೂಕಿನ ಬೊಮ್ಮಲಾಪುರದ ರಾಜಪ್ಪ (ರವಿ) ಆತ್ಮಹತ್ಯೆಗೆ ಶರಣಾದ ಸುದ್ದಿ ಅತೀವ ನೋವು ಹಾಗೂ ಬೇಸರ ತರಿಸಿದೆ. ರಾಜಕಾರಣದಲ್ಲಿ ಏರಿಳಿತಗಳು ಸಹಜ,ಇದಕ್ಕಾಗಿ ಪ್ರಾಣಾರ್ಪಣೆ ಮಾಡಿಕೊಳ್ಳಲು ಮುಂದಾಗುವುದು ಸರ್ವಥಾ ಒಪ್ಪಲಾಗದು, ಇದರಿಂದ ಕುಟುಂಬಕ್ಕಾಗುವ ನಷ್ಟ ಯಾರಿಂದಲೂ ಭರಿಸಲಾಗದು. ಅಭಿಮಾನ ಅತಿರೇಕಕ್ಕೆ ಹೋಗಬಾರದೆಂದು ಕೈಮುಗಿದು ವಿನಂತಿಸುವೆ. ರವಿ ಕುಟುಂಬದ ನೋವಿನೊಂದಿಗೆ ನಾನಿರುವೆ’ ಎಂದು ಹೇಳಿದ್ದಾರೆ.
ಯಡಿಯೂರಪ್ಪ ಅವರು ಸೋಮವಾರ ರಾಜಿನಾಮೆ ಸಲ್ಲಿಸಿದ ನಂತರ ರವಿ (35) ಅವರು ಬೇಸರದಲ್ಲಿದ್ದರು. ಇದೇ ಕಾರಣಕ್ಕೆ ಮನನೊಂದು ಸೋಮವಾರ ರಾತ್ರಿ ತಮ್ಮ ಹೋಟೆಲ್ ನಲ್ಲಿಯೇ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾರಾಗಿದ್ದಾರೆ ಎನ್ನಲಾಗಿದೆ.

0 Comments