Ticker

6/recent/ticker-posts

Ad Code

Responsive Advertisement

ದೇಶದಲ್ಲೀಗ ಕೊರೊನಾ ಮೂರನೇ ಅಲೆ ಭೀತಿ!


ಕೇರಳದ ನಂತರ ದಕ್ಷಿಣ ಭಾರತ ರಾಜ್ಯಗಳಲ್ಲಿ ಮತ್ತೆ ಕೊರೊನಾ ಪ್ರಕರಣಗಳಲ್ಲಿ ಏರಿಕೆ ಕಂಡುಬರುತ್ತಿದೆ. ಕೇರಳ ನಂತರ ತಮಿಳುನಾಡು, ಕರ್ನಾಟಕದಲ್ಲಿ ಕೊರೊನಾ ಪ್ರಕರಣಗಳಲ್ಲಿ ಗಣನೀಯವಾಗಿ ಏರಿಕೆ ಕಂಡುಬಂದಿದೆ.

ದೇಶದಲ್ಲಿ ಇಳಿಕೆಯಾಗಿದ್ದ ಕೊರೊನಾ ಪ್ರಕರಣಗಳ ಸಂಖ್ಯೆ ಮತ್ತೆ ಏರಿಕೆ ಹಾದಿಯಲ್ಲಿದೆ. ಒಂದು ವಾರದಿಂದಲೂ ದಿನನಿತ್ಯದ ಕೊರೊನಾ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದೆ. ಈಗಾಗಲೇ ಮೂರನೇ ಅಲೆ ಆರಂಭವಾಗಿದೆಯೇ ಎಂಬ ಚರ್ಚೆಯೂ ವೈಜ್ಞಾನಿಕ ವಲಯದಲ್ಲಿ ಕೇಳಿಬರುತ್ತಿದೆ.

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 41,649 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಕಳೆದ ವಾರ 29-30 ಸಾವಿರದ ಅಂಚಿನಲ್ಲಿದ್ದ ಕೊರೊನಾ ಪ್ರಕರಣಗಳು ಇದೀಗ ದ್ವಿಗುಣಗೊಂಡಿವೆ. ಒಂದೇ ದಿನದಲ್ಲಿ 37,291 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.

ಶನಿವಾರದ ಅಂಕಿಸಂಖ್ಯೆ ಪ್ರಕಾರ, ಇದುವರೆಗೂ ದೇಶದಲ್ಲಿ ಒಟ್ಟು 3,16,13,993 ಕೊರೊನಾ ಪ್ರಕರಣಗಳು ದಾಖಲಾಗಿವೆ. ಸಕ್ರಿಯ ಪ್ರಕರಣಗಳ ಸಂಖ್ಯೆ ನಾಲ್ಕು ಲಕ್ಷ ದಾಟಿದ್ದು, ಸದ್ಯ 4,08,920 ಪ್ರಕರಣಗಳಿವೆ. ಒಂದು ದಿನದ ಅವಧಿಯಲ್ಲಿ 593 ಮಂದಿ ಸೋಂಕಿನಿಂದ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಇಲ್ಲಿಯವರೆಗೆ ದೇಶದಲ್ಲಿ ಸೋಂಕಿನಿಂದ 4,23,810 ಮಂದಿ ಸಾವನ್ನಪ್ಪಿದ್ದಾರೆ. ಈವರೆಗೂ ಒಟ್ಟು 3,07,81,263 ಮಂದಿ ಗುಣಮುಖರಾಗಿದ್ದಾರೆ. 

ದೇಶದಲ್ಲಿ ಕೊವಿಡ್-19 ಲಸಿಕೆ ವಿತರಣೆ ಅಭಿಯಾನ ಆರಂಭಿಸಿ 196 ದಿನಗಳಲ್ಲಿ ಈವರೆಗೂ 46 ಕೋಟಿಗೂ ಅಧಿಕ ಫಲಾನುಭವಿಗಳಿಗೆ ಲಸಿಕೆ ವಿತರಿಸಲಾಗಿದೆ. ಶುಕ್ರವಾರ ರಾತ್ರಿ 7 ಗಂಟೆ ವೇಳೆಗೆ 44,38,901 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ವಿತರಿಸಲಾಗಿದೆ. ಈವರೆಗೂ ಸುಮಾರು 45 ಕೋಟಿಗೂ ಅಧಿಕ ಫಲಾನುಭವಿಗಳಿಗೆ ಲಸಿಕೆ ವಿತರಿಸಲಾಗಿದೆ. ಇದುವರೆಗೂ 46,15,18,479 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ವಿತರಿಸಲಾಗಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.

ಭಾರತದಲ್ಲಿ ಲಾಕ್‌ಡೌನ್‌ ಸಡಿಲಿಕೆ ನಂತರದಲ್ಲಿ ಸಾರ್ವಜನಿಕರು ಸರ್ಕಾರದ ಮಾರ್ಗಸೂಚಿಗಳ ಬಗ್ಗೆ ದಿವ್ಯ ನಿರ್ಲಕ್ಷ್ಯವನ್ನು ವಹಿಸಿರುವುದು ಗೊತ್ತಾಗಿದೆ. ಮಾಸ್ಕ್ ಧರಿಸದಿರುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುದಿರುವುದು ಹಾಗೂ ಇತರೆ ನಿಯಮಗಳ ಉಲ್ಲಂಘನೆಯಿಂದಾಗಿಯೇ ಕೆಲವು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಏರಿಕೆಗೆ ಪ್ರಮುಖ ಕಾರಣ ಎಂದು ಆರೋಗ್ಯ ಇಲಾಖೆ ರಾಜ್ಯ ಸಚಿವೆ ಡಾ. ಭಾರತಿ ಪ್ರವೀಣ್ ಪವಾರ್ ಹೇಳಿದ್ದಾರೆ.

"ಸಾಂಕ್ರಾಮಿಕ ರೋಗ ನಿಯಂತ್ರಿಸುವ ನಿಟ್ಟಿನಲ್ಲಿ ತುರ್ತು ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ಅಸಲಿಗೆ ಆರೋಗ್ಯ ಇಲಾಖೆಯು ರಾಜ್ಯದ ವ್ಯಾಪ್ತಿಗೆ ಸಂಬಂಧಿಸಿದ್ದಾಗಿದ್ದು, ಕೇಂದ್ರ ಸರ್ಕಾರದಿಂದ ಅಗತ್ಯ ತಂತ್ರಜ್ಞಾನ, ಮೂಲಭೂತ ಸೌಕರ್ಯ ಹಾಗೂ ಆರ್ಥಿಕ ನೆರವು ನೀಡುವುದರ ಮೂಲಕ ಕೇಂದ್ರ ಸರ್ಕಾರವು ಕೊವಿಡ್-19 ನಿಯಂತ್ರಣಕ್ಕೆ ಸಹಕರಿಸಲಿದೆ," ಎಂದು ಹೇಳಿದ್ದರು.

ಭಾರತದಲ್ಲಿ 2021ರ ಆಗಸ್ಟ್ ತಿಂಗಳಾಂತ್ಯದ ವೇಳೆಗೆ 135 ಕೋಟಿ ಡೋಸ್ ಕೊರೊನಾವೈರಸ್ ಲಸಿಕೆಯು ಲಭ್ಯವಾಗಿರಲಿದೆ. 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಡಿಸೆಂಬರ್ ಅಂತ್ಯದ ವೇಳೆಗೆ ಲಸಿಕೆ ವಿತರಿಸುವ ಉದ್ದೇಶವನ್ನು ಹೊಂದಲಾಗಿದೆ. 

ದೇಶದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆಯನ್ನು ಸಮರೋಪಾದಿಯಲ್ಲಿ ನಡೆಸಲಾಗುತ್ತಿದ್ದು, ಇಷ್ಟು ದಿನಗಳಲ್ಲೇ ಲಸಿಕೆ ವಿತರಣೆ ಅಭಿಯಾನ ಪೂರ್ಣಗೊಳ್ಳಬೇಕು ಎಂಬ ಯಾವುದೇ ಷರತ್ತುಗಳಿಲ್ಲ. ಅದಾಗ್ಯೂ ದೇಶದಲ್ಲಿ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಡಿಸೆಂಬರ್ ತಿಂಗಳಾಂತ್ಯದ ವೇಳೆಗೆ ಲಸಿಕೆಯನ್ನು ನೀಡುವ ಗುರಿಯನ್ನು ಹೊಂದಲಾಗಿದೆ. ಕೊರೊನಾವೈರಸ್ ಲಸಿಕೆ ಖರೀದಿ, ಸರಬರಾಜು ಮತ್ತು ಪೂರೈಕೆ ಜೊತೆಗೆ ವಿತರಣೆ ಅಭಿಯಾನಕ್ಕಾಗಿ ಈವರೆಗೂ 9,725.15 ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ ಎಂದು ಆರೋಗ್ಯ ಇಲಾಖೆ ರಾಜ್ಯ ಸಚಿವ ಡಾ. ಭಾರತಿ ಪ್ರವೀಣ್ ಪವಾರ್ ಹೇಳಿದ್ದಾರೆ.

Post a Comment

0 Comments

Ad Code

Responsive Advertisement