ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಏರಿಕೆ ಬೆನ್ನಲ್ಲೇ ಕರ್ನಾಟಕ ತಾಂತ್ರಿಕ ಸಲಹಾ ಸಮಿತಿ, ಕೊರೊನಾ ನಿಯಂತ್ರಣಕ್ಕೆ ಕೆಲವೊಂದು ಸಲಹೆಗಳನ್ನು ರಾಜ್ಯ ಸರ್ಕಾರದ ಮುಂದಿಟ್ಟಿದೆ.
ಕೊರೊನಾ ಮೂರನೇ ಅಲೆ ಆತಂಕದ ಬೆನ್ನಲ್ಲೇ ಸಲಹಾ ಸಮಿತಿ ಸರ್ಕಾರದ ಎದುರು ಈ ಸಲಹೆಗಳನ್ನು ಇಟ್ಟಿದೆ. ಕರ್ನಾಟಕ ಒಳಗೊಂಡಂತೆ ಹತ್ತು ರಾಜ್ಯಗಳಲ್ಲಿ ಕೊರೊನಾ ಪ್ರಕರಣಗಳಲ್ಲಿ ಏರಿಕೆಯಾಗಿರುವುದಾಗಿ ಕೇಂದ್ರ ಈಚೆಗೆ ತಿಳಿಸಿತ್ತು. ಸೋಂಕಿನ ಪಾಸಿಟಿವಿಟಿ ದರವೂ ಹೆಚ್ಚಿರುವುದಾಗಿ ತಿಳಿಸಿತ್ತು. ಜಿಲ್ಲೆಗಳಲ್ಲಿ ನಿಯಂತ್ರಣ ಕ್ರಮಗಳನ್ನು ಕಠಿಣಗೊಳಿಸುವಂತೆ ತಿಳಿಸಿತ್ತು. ಹೆಚ್ಚು ಜನ ಸೇರದಂತೆ ತಡೆಯಲು ಹಾಗೂ 10%ಗೂ ಅಧಿಕ ಪಾಸಿಟಿವಿಟಿ ದರ ಇರುವ ಕಡೆಗಳಲ್ಲಿ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಸೂಚನೆ ನೀಡಿತ್ತು.
ರಾಜ್ಯದ ಗಡಿ ಜಿಲ್ಲೆಗಳಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗಿದ್ದು, ಕರ್ನಾಟಕದಲ್ಲಿಯೂ ಕೆಲವು ದಿನಗಳಿಂದ ಪ್ರಕರಣಗಳ ಸಂಖ್ಯೆ ಏರುಗತಿಯಲ್ಲಿದೆ. ಹೀಗಾಗಿ ಕೆಲವು ಕೊರೊನಾ ನಿಯಮಗಳನ್ನು ರಾಜ್ಯದಲ್ಲಿ ಮತ್ತೆ ಜಾರಿಗೆ ತರುವ ಕುರಿತು ಚರ್ಚೆಗಳು ನಡೆಯುತ್ತಿವೆ.
ರಾಜ್ಯದಲ್ಲಿ ಕೊರೊನಾ ಪ್ರಕರಣಗಳಲ್ಲಿ ಏರಿಕೆ ಕಂಡುಬರುತ್ತಿರುವುದರಿಂದ ಈಗಲೇ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳುವುದು ಸೂಕ್ತ. ಹೀಗಾಗಿ ಎಲ್ಲೆಡೆ ರಾತ್ರಿ ಕರ್ಫ್ಯೂ ಮತ್ತೆ ಜಾರಿಗೊಳಿಸಬೇಕು. ಪ್ರತಿ ದಿನ ಸಂಜೆ ಏಳರಿಂದ ಬೆಳಿಗ್ಗೆ 6 ಗಂಟೆವರೆಗೆ ರಾತ್ರಿ ಕರ್ಫ್ಯೂ ಹೇರಿದರೆ ಸೂಕ್ತ ಎಂದು ಸಲಹೆ ನೀಡಲಾಗಿದೆ.
ರಾತ್ರಿ ಕರ್ಫ್ಯೂ ಜೊತೆಗೆ ಕೊರೊನಾ ನಿಯಂತ್ರಣಕ್ಕೆ ಸದ್ಯ ವಾರಾಂತ್ಯ ಕರ್ಫ್ಯೂ ಜಾರಿಗೊಳಿಸುವುದು ಕೂಡ ಸೂಕ್ತ ಎಂದು ತಂಡ ಸಲಹೆ ನೀಡಿದೆ. ರಾಜ್ಯದಲ್ಲಿ ಕೊರೊನಾ ಪ್ರಕರಣಗಳಲ್ಲಿ ಏರಿಳಿತವಾಗುತ್ತಿರುವುದರಿಂದ ಕಂಪನಿಗಳಲ್ಲಿ, ಸರ್ಕಾರಿ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿ ಸಂಖ್ಯೆಯನ್ನು ತಗ್ಗಿಸಬೇಕಿದೆ. ಕಚೇರಿಗಳಲ್ಲಿ ಶೇ. 50ರಷ್ಟು ಮಂದಿಗೆ ಮಾತ್ರ ಕೆಲಸ ನಿರ್ವಹಿಸಲು ಅವಕಾಶ ನೀಡಬೇಕಿದೆ ಎಂದು ಹೇಳಿದೆ.

0 Comments