ಪ್ರಾಮಾಣಿಕ ಶಾಸಕರ ಸೇರ್ಪಡೆಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶೀಘ್ರದಲ್ಲೇ ಸಚಿವ ಸಂಪುಟ ವಿಸ್ತರಣೆ ಮಾಡಲಿದ್ದಾರೆಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ನಾಲ್ಕು ಮಂತ್ರಿಗಳ ಸ್ಥಾನ ಖಾಲಿ ಇರುವುದರಿಂದ, ಕಲಬುರಗಿಯಿಂದ ಚುನಾಯಿತ ಪ್ರತಿನಿಧಿಯೊಬ್ಬರಿಗೆ ಸ್ಥಾನ ನೀಡಲು ಮುಖ್ಯಮಂತ್ರಿಗಳು ಚಿಂತನೆ ನಡೆಸುತ್ತಿದ್ದಾರೆಂದು ಹೇಳಿದ್ದಾರೆ.
ಜನ ಆಶೀರ್ವಾದ ಯಾತ್ರೆಗಳಲ್ಲಿ ಪಕ್ಷದ ಕಾರ್ಯಕರ್ತರ ಕೋವಿಡ್ ನಿಯಮಗಳನ್ನು ಉಲ್ಲಂಘನೆ
ಮಾಡುತ್ತಿರುವ ಹಿನ್ನೆಲೆಯಲ್ಲಿ ಮಾತನಾಡಿ, ಎಲ್ಲಾ ನಿಯಮಗಳನ್ನು ಅನುಸರಿಸಿಯೇ ಯಾತ್ರೆ
ನಡೆಸಲು ಆಯೋಜಿಸಲಾಗಿತ್ತು. ಆದರೆ, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರಿಂದ
ನಿಯಮ ಉಲ್ಲಂಘನೆಯಾಗಿದೆ. ಈ ನಿಯಮ ಉಲ್ಲಂಘನೆ ಉದ್ದೇಶಪೂರ್ವಕವಾಗಿರಲಿಲ್ಲ ಎಂದು
ತಿಳಿಸಿದ್ದಾರೆ.
ಬೆಳಗಾವಿ, ಹುಬ್ಬಳ್ಳಿ-ಧಾರವಾಡ ಮತ್ತು ಕಲಬುರಗಿ ನಗರ ನಿಗಮಗಳಿಗೆ ಸೆಪ್ಟೆಂಬರ್ 3 ರಂದು ಚುನಾವಣೆ ನಿಗದಿಯಾಗಿದ್ದು, ಈ ಕುರಿತು ಮಾತನಾಡಿರುವ ಅವರು, ಬಿಜೆಪಿ ಜನಪರ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತಿದೆ ಮತ್ತು ಎಲ್ಲಾ ಮೂರು ನಗರ ಸಂಸ್ಥೆಗಳಲ್ಲಿ ಬಹುಮತ ಗಳಿಸುವ ವಿಶ್ವಾಸವಿದೆ. ನಾವು ಯಾವುದೇ ಪಕ್ಷದೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

0 Comments