ಮಧುಗಿರಿ - ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಕ್ಷಾಂತರ ಮಾಡಿದ್ದು ಹೊಟ್ಟೆಪಾಡಿಗಾಗಿಯೋ ಅಥವಾ ಅಧಿಕಾರದ ದಾಹಕ್ಕಾಗಿಯೋ ಎಂಬುದನ್ನು ಮೊದಲು ಅರಿಯಬೇಕು ಎಂದು ತಾಲೂಕು ಬಿಜೆಪಿ ಎಸ್ಸಿ ಮೋರ್ಚಾದ ಅಧ್ಯಕ್ಷ ಆರ್.ರವಿ ತಿಳಿಸಿದರು.
ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಎಸ್ಸಿ ಮೋರ್ಚಾದ ವತಿಯಿಂದ ಕರೆದಿದ್ದ ಸುದ್ದಿಗೋಷ್ಠಿಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಸಿಂದಗಿ ಉಪಚುನಾವಣೆ ಫಲಿತಾಂಶದ ಬಳಿಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ದಲಿತರು ಹೊಟ್ಟೆಪಾಡಿಗಾಗಿ ಬಿಜೆಪಿ ಪಕ್ಷದಲ್ಲಿ ಇದ್ದಾರೆ ಎಂದು ಹೇಳಿಕೆ ನೀಡಿರುವುದು ಖಂಡನೀಯ. ನೀವು ಅಧಿಕಾರದಲ್ಲಿ ಇದ್ದಾಗ ದಲಿತರನ್ನು ಯಾವ ರೀತಿ ನೋಡಿದ್ದೀರಾ ಎಂಬುದು ಎಲ್ಲರಿಗೂ ತಿಳಿದಿದೆ. ಸಚಿವರಾಗಿದ್ದ ಅಂಜನೇಯ ಅವರನ್ನು ಸಭೆಯಲ್ಲಿ ಪಕ್ಕಕ್ಕೆ ನೂಕಿ ಅವಮಾನ ಮಾಡಿದ್ದನ್ನು ಇನ್ನು ಯಾರೂ ಮರೆತಿಲ್ಲ. ನಿಮ್ಮ ಪೂರ್ವಪರ ತಿಳಿಯದೆ ಈ ರೀತಿ ಮಾತನಾಡುವುದು ನಿಮಗೆ ಶೋಭೆ ತರುವುದಿಲ್ಲ ಎಂದು ತಿಳಿಸಿದರು.
ಬಿಜೆಪಿ ಪಕ್ಷದ ತತ್ವ ಸಿದ್ದಾಂತವನ್ನು ಮೆಚ್ಚಿ ದಲಿತರು ಬಿಜೆಪಿ ಪಕ್ಷದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಬಿಜೆಪಿ ಪಕ್ಷ ಅನೇಕ ಉನ್ನತ ಅಧಿಕಾರವನ್ನು ನೀಡುವುದರ ಮೂಲಕ ದಲಿತರನ್ನು ಸಮಾಜ ಮುಖ್ಯವಾಹಿನಿಗೆ ಕೊಂಡೊಯ್ಯುತ್ತಿದೆ. ಸಿದ್ದರಾಮಯ್ಯ ಅವರ ಹೇಳಿಕೆಯನ್ನು ವಾಪಾಸ್ ಪಡೆಯಬೇಕು ಇಲ್ಲವಾದಲ್ಲಿ ಅವರ ವಿರುದ್ದ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ತಾಲೂಕು ಬಿಜೆಪಿ ಅಧ್ಯಕ್ಷ ಪಿಎಲ್ ನರಸಿಂಹಮೂರ್ತಿ ಮಾತನಾಡಿ, ಸಿದ್ದರಾಮಯ್ಯ ಅವರು ದಲಿತರ ಬಗ್ಗೆ ಕೀಳಾಗಿ ಮಾತನಾಡಿರುವುದು ಖಂಡನೀಯ. ಪ್ರಜಾಪ್ರಭುತ್ವದಲ್ಲಿ ಎಲ್ಲಾ ಜಾತಿಯವರಿಗೂ ಸಮಾನ ಹಕ್ಕಿದೆ. ಯಾರೂ ಯಾವ ಪಕ್ಷದಲ್ಲಿ ಬೇಕಾದರೂ ಗುರುತಿಸಿಕೊಳ್ಳಬಹುದು. ನೀವೊಬ್ಬ ಅನುಭವಿ ರಾಜಕಾರಣಿಯಾಗಿ ಇಂತಹ ಹೇಳಿಕೆ ನೀಡುವುದು ನಿಮಗೆ ಶೋಭೆ ತರುವುದಿಲ್ಲ. ಇದಕ್ಕೆ ತಕ್ಕ ಉತ್ತರವನ್ನು ಮುಂದಿನ ಚುನಾವಣೆಯಲ್ಲಿ ದಲಿತರು ನೀಡಲಿದ್ದಾರೆ ಎಂದು ತಿಳಿಸಿದರು.
ತಾಲೂಕು ಬಿಜೆಪಿ ಕಾರ್ಯದರ್ಶಿ ಸೀತಾರಾಂ, ನಾಗೇಂದ್ರ, ಎಸ್.ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಸಿದ್ದಗಂಗಯ್ಯ, ರವಿಕೀರ್ತಿ, ಮಹಿಳಾ ಮೋರ್ಚಾ ಅಧ್ಯಕ್ಷ ರತ್ನಮ್ಮ, ಪ್ರಧಾನ ಕಾರ್ಯದರ್ಶಿ ಪುಟ್ಟತಾಯಮ್ಮ, ಉಪಾಧ್ಯಕ್ಷೆ ಜಯಮ್ಮ, ಯುವ ಮೋರ್ಚಾ ಅಧ್ಯಕ್ಷ ಕಾರ್ತೀಕ್ ಆರಾಧ್ಯ, ಪ್ರಧಾನ ಕಾರ್ಯದರ್ಶಿ ತೇಜಸ್ ಗೌಡ, ಪದಾಧಿಕಾರಿಗಳಾದ ಲಕ್ಷ್ಮೀಪತಿ, ಮಂಜುನಾಥ್, ತಿಮ್ಮಣ್ಣ, ರಾಮಾಂಜಿ, ರಂಗನಾಥ, ಅಶ್ವತ್ ನಾರಾಯಣ್, ಪ್ರಕಾಶ್, ಲೋಕೇಶ, ರಂಗನಾಥ, ಶ್ರೀಧರ್, ಹೊನ್ನಪ್ಪ, ಜಗನಾಥ್, ರಮೇಶ ಹಾಗೂ ಮುಂತಾದವರು ಇದ್ದರು.
0 Comments