ಬಳ್ಳಾರಿ,ಜ.02: ಯುವಜನರಲ್ಲಿ ಅಡಗಿರುವ ಕಲಾಪ್ರತಿಭೆಯನ್ನು ಅನಾವರಣಗೊಳಿಸುವಲ್ಲಿ ಯುವಸೌರಭದಂತ ಸಾಂಸ್ಕೃತಿಕ ಕಾರ್ಯಕ್ರಮಗಳು ಸಹಕಾರಿಯಾಗಲಿವೆ ಎಂದು ಬಳ್ಳಾರಿ ನಗರ ಶಾಸಕ ಸೋಮಶೇಖರರೆಡ್ಡಿ ಅವರು ಹೇಳಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಾಂಸ್ಕೃತಿಕ ಸಮುಚ್ಚಯ ಆವರಣದಲ್ಲಿ ಆಯೋಜಿಸಲಾಗಿದ್ದ ಯುವಸೌರಭ ಸಾಂಸ್ಕೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ನಂತರ ಅವರು ಮಾತನಾಡಿದರು.
ಇಂದಿನ ಯುವಕರು ಕಲೆ, ಸಾಂಸ್ಕೃತಿಕ, ಸಾಹಿತ್ಯ ಚಟುವಟಿಕೆಗಳ ಬಗ್ಗೆ ಆಸಕ್ತಿ ವಹಿಸುವುದು ಬಹುಮುಖ್ಯವಾಗಿದೆ ಎಂದು ಅವರು ಹೇಳಿದರು.
ನಂತರ ನಡೆದ ಯುವಸೌರಭದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಹಿಂದೂಸ್ತಾನಿ ಸಂಗೀತ, ಸಮೂಹ ನೃತ್ಯ, ಜಾನಪದ ಗೀತೆಗಳು, ಗಮಕ ಕಥಾ ಕೀರ್ತನೆ, ಹಕ್ಕಿ ಪಿಕ್ಕಿ ನೃತ್ಯ, ತಮಟೆ ವಾದ್ಯ, ತಾಷರಂಡೋಲ್, ಸುಗಮ ಸಂಗೀತ, ನಾಟಕ ಸೇರಿದಂತೆ ವಿವಿಧ ಕಲಾಪ್ರಕಾರಗಳನ್ನು ಯುವಕಲಾವಿದರು ಪ್ರದರ್ಶಿಸಿದರು. ಈ ಕಲಾವಿದರ ಪ್ರದರ್ಶನ ಜನಮನಸೂರೆಗೊಂಡಿತು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕÀ ಸಿದ್ದಲಿಂಗೇಶ ಕೆ.ರಂಗಣ್ಣವರ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.
ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಡಾ.ನಿಷ್ಠಿ ರುದ್ರಪ್ಪ, ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕ ಎನ್.ರಾಜು ಅವರು ಉಪಸ್ಥಿತರಿದ್ದರು.
0 Comments