*ನಿರಾಶ್ರಿತರ ಕೇಂದ್ರವಾದ ಆರೋಗ್ಯ ಕೇಂದ್ರ: ಎಸ್.ಆರ್.ವಿಶ್ವನಾಥ್ ವಿರುದ್ಧ ಎಎಪಿ ಆಕ್ರೋಶ*
ದೊಡ್ಡಬೆಟ್ಟಹಳ್ಳಿಯಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ನಿರಾಶ್ರಿತರ ಕೇಂದ್ರವನ್ನಾಗಿ ಪರಿವರ್ತಿಸುತ್ತಿರುವ ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ನಡೆಗೆ ಆಮ್ ಆದ್ಮಿ ಪಾರ್ಟಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.
ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಬೆಂಗಳೂರು ಎಎಪಿ ಉಪಾಧ್ಯಕ್ಷರಾದ ಬಿ.ಟಿ.ನಾಗಣ್ಣ, “ಯಲಹಂಕ ವಿಧಾನಸಭಾ ಕ್ಷೇತ್ರದ ದೊಡ್ಡಬೆಟ್ಟಹಳ್ಳಿಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರವು ಮೂರೂವರೆ ವರ್ಷಗಳಿಂದ ಮುಚ್ಚಲ್ಪಟ್ಟಿತ್ತು. ಸ್ಥಳೀಯರ ಅಪೇಕ್ಷೆಯಂತೆ ಆಮ್ ಆದ್ಮಿ ಪಾರ್ಟಿಯು ಇದನ್ನು ಬಿಬಿಎಂಪಿ ಅಧಿಕಾರಿಗಳ ಗಮನಕ್ಕೆ ತಂದು, ಆರೋಗ್ಯ ಕೇಂದ್ರವನ್ನು ಪುನರಾರಂಭಿಸಬೇಕು ಎಂದು ಒತ್ತಾಯಿಸಿತ್ತು. ಪಾಳು ಬಿದ್ದಿದ್ದ ಕಟ್ಟಡವನ್ನು ಸ್ವಚ್ಛಗೊಳಿಸಿ ಕೊಟ್ಟಿದ್ದೆವು. ಆದರೆ ಈಗ ಆರೋಗ್ಯ ಕೇಂದ್ರವನ್ನು ತೆರೆಯುವ ಬದಲು ಅದನ್ನು ನಿರಾಶ್ರಿತರ ಕೇಂದ್ರವನ್ನಾಗಿ ಮಾಡಲಾಗುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.
“ಶಾಸಕ ಎಸ್.ಆರ್.ವಿಶ್ವನಾಥ್ರವರು ಈ ವಿಚಾರವನ್ನು ರಾಜಕೀಯ ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಾರೆ. ಆರೋಗ್ಯ ಕೇಂದ್ರ ಪುನರಾರಂಭಿಸಿದರೆ ಆಮ್ ಆದ್ಮಿ ಪಾರ್ಟಿಯ ಆಗ್ರಹಕ್ಕೆ ಮನ್ನಣೆ ಸಿಕ್ಕಂತಾಗುತ್ತದೆ ಎಂಬ ಒಂದೇ ಒಂದು ಕಾರಣಕ್ಕೆ ಅಡ್ಡಗಾಲು ಹಾಕುತ್ತಿದ್ದಾರೆ. ಅವರ ಕೀಳುಮಟ್ಟದ ರಾಜಕೀಯದಿಂದಾಗಿ ದೊಡ್ಡಬೆಟ್ಟಹಳ್ಳಿ ಹಾಗೂ ಸುತ್ತಮುತ್ತಲಿನ ಜನರು ಆರೋಗ್ಯ ಸೌಲಭ್ಯದಿಂದ ವಂಚಿತರಾಗುತ್ತಿದ್ದಾರೆ. ಕೋವಿಡ್ ಆತಂಕದ ಸಂದರ್ಭದಲ್ಲೂ ರೋಗಿಗಳು ನೂರು ರೂಪಾಯಿಗೂ ಹೆಚ್ಚು ಖರ್ಚು ಮಾಡಿಕೊಂಡು ದೂರದ ಆಸ್ಪತ್ರೆಗಳಿಗೆ ಪ್ರಯಾಣಿಸಬೇಕಾಗಿದೆ” ಎಂದು ಬಿ.ಟಿ.ನಾಗಣ್ಣ ಬೇಸರ ವ್ಯಕ್ತಪಡಿಸಿದರು.
ಆಮ್ ಆದ್ಮಿ ಪಾರ್ಟಿಯ ಬೆಂಗಳೂರು ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಸುಹಾಸಿನಿ ಫಣಿರಾಜ್ ಮಾತನಾಡಿ, “ಸ್ಥಳೀಯ ಶಾಸಕರನ್ನು ಎದುರುಹಾಕಿಕೊಂಡು ಆರೋಗ್ಯ ಕೇಂದ್ರ ಮುಂದುವರಿಸಲು ಸಾಧ್ಯವಿಲ್ಲವೆಂದು ಬಿಬಿಎಂಪಿ ಅಧಿಕಾರಿಗಳು ಹೇಳುತ್ತಿದ್ದಾರೆ. ಶಾಸಕರಿಗೆ ಹೆದರಿ ಕೆಟ್ಟ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾದ ಸ್ಥಿತಿಯಲ್ಲಿ ಅಧಿಕಾರಿಗಳಿರುವುದು ನಿಜಕ್ಕೂ ದುರಂತ. ಬಡ ಹಾಗೂ ಮಧ್ಯಮ ವರ್ಗದ ಜನರ ಬಗ್ಗೆ ಸ್ವಲ್ಪವೂ ಕಾಳಜಿಯಿಲ್ಲದ ರಾಜಕಾರಣಿ ಎಂದರೆ ಅದು ಎಸ್.ಆರ್.ವಿಶ್ವನಾಥ್. ಸುಮಾರು 4 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡ ಆರೋಗ್ಯ ಕೇಂದ್ರದಿಂದ ಜನರಿಗೆ ಯಾವುದೇ ಲಾಭ ಸಿಗದಂತೆ ಮಾಡುತ್ತಿದ್ದಾರೆ. ಬಿಡಿಎಯಲ್ಲಿ ಭ್ರಷ್ಟಾಚಾರ ಮಾಡುವುದಕ್ಕಷ್ಟೇ ಅವರು ಯೋಗ್ಯರು. ಇದನ್ನು ಆರೋಗ್ಯ ಕೇಂದ್ರವನ್ನಾಗಿಯೇ ಮುಂದುವರಿಸಿ, ನಿರಾಶ್ರಿತರ ಕೇಂದ್ರವನ್ನು ಬೇರೆಡೆ ತೆರೆಯಬೇಕು” ಎಂದು ಆಗ್ರಹಿಸಿದರು.
ಯಲಹಂಕ ವಿಧಾನಸಭಾ ಕ್ಷೇತ್ರದ ಎಎಪಿ ಮುಖಂಡರಾದ ನಿತಿನ್ ರೆಡ್ಡಿ ಹಾಗೂ ಸ್ಥಳೀಯ ನಾಯಕರು ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ್ದರು.
0 Comments