ಬೆಂಗಳೂರು, ಫೆ 26: ಉಕ್ರೇನ್ʼನಲ್ಲಿ ಸಿಲುಕಿರುವ ರಾಜ್ಯದ ವಿದ್ಯಾರ್ಥಿಗಳು, ನಾಗರೀಕರನ್ನು ಸುರಕ್ಷಿತವಾಗಿ ಏರ್ʼಲಿಫ್ಟ್ ಮಾಡಿ ರಾಜ್ಯಕ್ಕೆ ಕರೆತೆರಬೇಕು ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಮತ್ತು ಕೇಂದ್ರ ಸರಕಾರಗಳನ್ನು ಒತ್ತಾಯ ಮಾಡಿದ್ದಾರೆ.
ಹೆಬ್ಬಾಳ ವಿಧಾನಸಭೆ ಕ್ಷೇತ್ರದಲ್ಲಿಂದು ಜಾತ್ಯತೀತ ಜನತಾದಳ ಪಕ್ಷದ ಕಚೇರಿ ಉದ್ಘಾಟನೆ ಸಂದರ್ಭದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ರಷ್ಯಾ ಆಕ್ರಮಣದಿಂದ ತತ್ತರಿಸಿರುವ ಕನ್ನಡಿಗರು ಉಕ್ರೇನ್ʼನಲ್ಲಿ ಜೀವಭಯದಿಂದ ತತ್ತರಿಸಿದ್ದಾರೆ. ಕೂಡಲೇ ಅವರನ್ನು ರಕ್ಷಿಸಿ ಕರೆತರುವ ಕೆಲಸ ಆಗಬೇಕು ಎಂದರು.
ಅಲ್ಲದೆ, ಈ ಬಗ್ಗೆ ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿಗಳು, “ಕೇಂದ್ರ ಸರಕಾರವು ಎಲ್ಲ ರಾಜತಾಂತ್ರಿಕ ಮಾರ್ಗಗಳನ್ನು ಹುಡುಕಿ ಕನ್ನಡಿಗರನ್ನು ವಾಪಸ್ ಕರೆತರಬೇಕು” ಎಂದಿದ್ದಾರೆ.
ಅವರ ಟ್ವೀಟ್ʼನ ಪೂರ್ಣಪಾಠ ಹೀಗಿದೆ:
ರಷ್ಯಾ ದಾಳಿಯಿಂದ ತತ್ತರಿಸಿರುವ ಉಕ್ರೇನ್ʼನಲ್ಲಿ ರಾಜ್ಯದ ನೂರಾರು ವಿದ್ಯಾರ್ಥಿಗಳು ಸಿಲುಕಿರುವ ಮಾಹಿತಿಯನ್ನು ಸರಕಾರವೇ ನೀಡಿದೆ. ಆ ದೇಶದ ಕೀವ್ ನಗರ ಸೇರಿ ವಿವಿಧೆಡೆ ಕಷ್ಟದಲ್ಲಿರುವ ಕನ್ನಡಿಗರ ರಕ್ಷಣೆಗೆ ಎಲ್ಲ ತುರ್ತು ಕ್ರಮಗಳನ್ನು ತಕ್ಷಣವೇ ಕೈಗೊಳ್ಳಬೇಕು, ಅವರೆಲ್ಲರನ್ನೂ ಸುರಕ್ಷಿತವಾಗಿ ತಾಯ್ನಾಡಿಗೆ ವಾಪಸ್ ಕರೆತರಬೇಕು.
ಶೆಲ್, ಕ್ಷಿಪಣಿ, ಬಾಂಬ್ ದಾಳಿ ಭೀತಿಯಿಂದ ವಿದ್ಯಾರ್ಥಿಗಳು ಬಂಕರ್ʼಗಳಲ್ಲಿ & ಮೆಟ್ರೋ ರೈಲು ಅಂಡರ್ʼಗ್ರೌ0ಡ್ʼನಲ್ಲಿ ಆಶ್ರಯ ಪಡೆದಿದ್ದಾರೆ. ಆ ದೃಶ್ಯಗಳು ಕಳವಳಕಾರಿ. ಸ್ಫೋಟದ ಸದ್ದು ಕೇಳಿಸಿಕೊಂಡು ಕ್ಷಣಕ್ಷಣಕ್ಕೂ ಭಯಭೀತಿಯಲ್ಲಿರುವ ಅವರೆಲ್ಲರನ್ನು ನೋಡಿದರೆ ಯುದ್ಧದ ಭೀಕರತೆ ಎಂಥದ್ದು ಎಂಬುದನ್ನು ಅರಿಯಬಹುದು.
ಅಲ್ಲಿ ವಿದ್ಯಾರ್ಥಿಗಳು ಸಂಕಷ್ಟದಲ್ಲಿದ್ದರೆ, ಇಲ್ಲಿ ಅವರ ತಂದೆ-ತಾಯಿ ಮಕ್ಕಳ ಬಗ್ಗೆ ತೀವ್ರ ಆತಂಕದಲ್ಲಿದ್ದಾರೆ. ಉಕ್ರೇನ್ʼನಲ್ಲಿ ಬಾಂಬ್ʼಗಳ ಮೊರೆತಕ್ಕೆ ಅವರು ಮತ್ತಷ್ಟು ಕಂಗಾಲಾಗುತ್ತಿದ್ದಾರೆ. ನಾನು ಕೂಡ ಕನ್ನಡಿಗರ ರಕ್ಷಣೆಗೆ ನೇಮಕಗೊಂಡಿರುವ ಉಸ್ತುವಾರಿ ಅಧಿಕಾರಿ ಜತೆ ನಿರಂತರ ಸಂಪರ್ಕದಲ್ಲಿದ್ದೇನೆ. ಕೇಂದ್ರ ಸರಕಾರವು ತನ್ನೆಲ್ಲ ರಾಜತಾಂತ್ರಿಕ ಮಾರ್ಗಗಳನ್ನು ಬಳಸಿಕೊಂಡು ಉಕ್ರೇನ್ʼನಲ್ಲಿರುವ ಎಲ್ಲ ಕನ್ನಡಿಗರನ್ನೂ ಏರ್ʼಲಿಫ್ಟ್ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.
Varthajala daily, Bengaluru
0 Comments