ಅಡುಗೆ ಅನಿಲ, ಖಾದ್ಯ ತೈಲ, ಇಂಧನ ತೈಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಏಪ್ರಿಲ್ 9ರ ಶನಿವಾರ ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಆಮ್ ಆದ್ಮಿ ಪಾರ್ಟಿ ನಿರ್ಧರಿಸಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಎಪಿಯ ಬೆಂಗಳೂರು ಮಹಿಳಾ ಘಟಕದ ಅಧ್ಯಕ್ಷೆ ಕುಶಲಸ್ವಾಮಿ, “ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಗಳ ದುರಾಡಳಿತದಿಂದಾಗಿ ಅಗತ್ಯ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಕೇಂದ್ರ ಸರ್ಕಾರವು ಅಡುಗೆ ಅನಿಲ, ಇಂಧನ ತೈಲ ಮುಂತಾದವುಗಳ ಬೆಲೆ ಏರಿಕೆ ಮಾಡುತ್ತಿದ್ದರೆ, ರಾಜ್ಯ ಸರ್ಕಾರವು ವಿದ್ಯುತ್, ಹಾಲಿನ ಬೆಲೆಯನ್ನು ಏರಿಸುತ್ತಿದೆ. ಉದ್ಯಮಿಗಳಿಗೆ ಲಾಭ ಮಾಡಿಕೊಟ್ಟು ಅವರಿಂದ ಪಕ್ಷಕ್ಕೆ ದೇಣಿಗೆ ಪಡೆಯುವ ದುರುದ್ದೇಶದಿಂದ ಸರ್ಕಾರಗಳು ಈ ರೀತಿ ಮಾಡುತ್ತಿವೆ. ಇದರ ಪರಿಣಾಮವಾಗಿ ಸಾಮಾನ್ಯ ಜನರು ಕಷ್ಟ ಅನುಭವಿಸುತ್ತಿದ್ದಾರೆ” ಎಂದು ಹೇಳಿದರು.
“ಕಳ್ಳರು ಜನರ ಗಮನವನ್ನು ಬೇರೆಡೆ ಸೆಳೆದು ಪಿಕ್ಪಾಕೆಟ್ ಮಾಡುವಂತೆ, ಬಿಜೆಪಿ ಸರ್ಕಾರವು ಜನರ ಗಮನಗಳನ್ನು ಕೋಮುಸಂಘರ್ಷದತ್ತ ಸೆಳೆದು ಬೆಲೆ ಏರಿಕೆ ಮಾಡುತ್ತಿದೆ. ಇದನ್ನು ಸೂಕ್ತ ರೀತಿಯಲ್ಲಿ ಪ್ರಶ್ನಿಸುವುದರಲ್ಲಿ ಪ್ರತಿಪಕ್ಷಗಳ ಕಾಂಗ್ರೆಸ್, ಜೆಡಿಎಸ್ ವಿಫಲವಾಗಿದೆ. ಆಮ್ ಆದ್ಮಿ ಪಾರ್ಟಿಯು ಜನಸಾಮಾನ್ಯರ ಬಗ್ಗೆ ಕಾಳಜಿ ಹೊಂದಿರುವ ಏಕೈಕ ಪಕ್ಷವಾಗಿದ್ದು, ಫ್ರೀಡಂ ಪಾರ್ಕ್ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಸರ್ಕಾರವನ್ನು ಪ್ರಶ್ನಿಸಲಿದ್ದೇವೆ” ಎಂದು ಕುಶಲಸ್ವಾಮಿ ಹೇಳಿದರು.
ಆಮ್ ಆದ್ಮಿ ಪಾರ್ಟಿ ವಕ್ತಾರರಾದ ಉಷಾ ಮೋಹನ್ ಮಾತನಾಡಿ, “ದೆಹಲಿಯ ಎಎಪಿ ಸರ್ಕಾರವು ರಿಯಾಯಿತಿ ದರ ಅಥವಾ ಉಚಿತವಾಗಿ ಮೂಲ ಸೌಕರ್ಯಗಳನ್ನು ನೀಡಿ ಜನಸಾಮಾನ್ಯರಿಗೆ ನೆರವಾಗುತ್ತಿದೆ. ಅದಕ್ಕೆ ವಿರುದ್ಧವಾಗಿ, ಬಿಜೆಪಿ ಸರ್ಕಾರಗಳು ಜನರ ಬದುಕನ್ನು ಹೈರಾಣಾಗಿಸುತ್ತಿದೆ. ಒಂದೆಡೆ ಭ್ರಷ್ಟಾಚಾರದ ಮೂಲಕ ಜನರ ತೆರಿಗೆ ಹಣವನ್ನು ಲೂಟಿ ಮಾಡಿ, ಮತ್ತೊಂಡೆದೆ ಬೆಲೆ ಏರಿಕೆ ಮೂಲಕ ಜನರ ಉಳಿತಾಯದ ಹಣಕ್ಕೂ ಬಿಜೆಪಿ ಸರ್ಕಾರ ಕನ್ನ ಹಾಕುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪಕ್ಷದ ಮಹಿಳಾ ಮುಖಂಡರಾದ ಸುಹಾಸಿನಿ ಫಣಿರಾಜ್ ಹಾಗೂ ಪಲ್ಲವಿ ಚಿದಂಬರ್ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ್ದರು.


0 Comments