ಬಳ್ಳಾರಿ ಮೇ 07. ಎಸ್.ಯು.ಸಿ.ಐ (ಕಮ್ಯುನಿಸ್ಟ್) ಪಕ್ಷದ ಜಿಲ್ಲಾ ಸಮಿತಿಯಿಂದ ಕೇಂದ್ರ ಬಿಜೆಪಿ ಸರ್ಕಾರದ ಗೃಹ ಬಳಕೆಯ ಗ್ಯಾಸ್ ಸಿಲೆಂಡರ್ ಬೆಲೆ ಏರಿಕೆ ನಿರ್ಧಾರ ಖಂಡಿಸಿ ಹಳೆ ಬಸ್ ನಿಲ್ದಾಣದ ಮುಂಭಾಗದಲ್ಲಿ ಪ್ರತಿಭಟಿಸಲಾಯಿತು. ‘ಜನಗಳ ಜೇಬು ಲೂಟಿ ಮಾಡುವ ಮೋದಿ ಸರ್ಕಾರಕ್ಕೆ ಧಿಕ್ಕಾರ’!, ‘ಬಿಜೆಪಿ ಸರ್ಕಾರದ ಬೆಲೆ ಏರಿಕೆ ನೀತಿಗೆ ಧಿಕ್ಕಾರ’!, ‘ಗಾಯದ ಮೇಲೆ ಬರೆ ಎಳೆಯುವ ಕೇಂದ್ರ ಸರ್ಕಾರಕ್ಕೆ ಧಿಕ್ಕಾರ’ !, ‘ಅಂಬಾನಿ-ಅದಾನಿಗಳ ಏಜೆಂಟ್ ಬಿಜೆಪಿ ಸರ್ಕಾರಕ್ಕೆ ಧಿಕ್ಕಾರ!’, ‘ಜನ ದ್ರೋಹಿ ಮೋದಿ ಸರ್ಕಾರವನ್ನು ಖಂಡಿಸಿ!’ ಮುಂತಾದ ಘೋಷಣೆಗಳನ್ನು ಪಕ್ಷದ ಕಾರ್ಯಕರ್ತರು, ಬೆಂಬಲಿಗರು ಕೂಗಿದರು.
ಎಸ್ಯುಸಿಐ (ಸಿ) ಜಿಲ್ಲಾ ಸಮಿತಿಯ ಸದಸ್ಯರಾದ ಕಾ.ಎ. ದೇವದಾಸ್ ಅವರು ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ “ಕೇಂದ್ರ ಬಿಜೆಪಿ ಸರ್ಕಾರ ಕಳೆದ 7 ವರ್ಷಗಳಲ್ಲಿ ಕಾರ್ಪೋರೆಟ್ ಮಾಲೀಕರ ರೂ.10.7 ಲಕ್ಷ ಕೋಟಿ ಸಾಲವನ್ನು ಮನ್ನಾ ಮಾಡಿದೆ. ಶೇ.33ರಷ್ಟಿದ್ದ ಕಾರ್ಪೋರೇಟ್ ತೆರಿಗೆಯನ್ನು ಶೇ.22ಕ್ಕೆ ಇಳಿಸಿದೆ. ಅತಿ ಶ್ರೀಮಂತರ ಪಟ್ಟಿಯಲ್ಲಿ ಅಂಬಾನಿ ಹಾಗೂ ಅದಾನಿ, ಏಷಿಯಾದಲ್ಲೇ ಮೊದಲೆರೆಡು ಸ್ಥಾನದಲ್ಲಿ ಮಿಂಚುತ್ತಿದ್ದಾರೆ. ಕೋವಿಡ್ಯಿಂದಾಗಿ ಜನ ತತ್ತರಿಸುತ್ತಿರುವಾಗ ಅಂಬಾನಿ ಆಸ್ತಿ 3-4 ಪಟ್ಟು ಹೆಚ್ಚಾಗಿದೆ. ಇದೆಲ್ಲ ಯಾರ ಕೃಪೆಯಿಂದ? ಮೋದಿ ಸರ್ಕಾರ ಸಂಪೂರ್ಣವಾಗಿ ಜನ ವಿರೋಧಿ ಹಾಗೂ ಕಾರ್ಪೋರೇಟ್ ಮಾಲೀಕರ ಪರವಾಗಿದೆ. ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ಬಂಡವಾಳಶಾಹಿ ಪರ ನೀತಿಗಳನ್ನೇ ಬಿಜೆಪಿ ಸರ್ಕಾರ ಮುಂದುವರೆಸುತ್ತಿದೆ. ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಯಾವುದೇ ವ್ಯತ್ಯಾಸಗಳಿಲ್ಲ. ಯಾವ ಪಕ್ಷ ಅಧಿಕಾರಕ್ಕೇರಿದರೂ ಜನರಿಗೆ ಸಮಸ್ಯೆಗಳಿಂದ ಮುಕ್ತಿ ಸಿಗುವುದಿಲ್ಲ. ಈ ಹಿನ್ನಲೆಯಲ್ಲಿ ಜನತೆ ಹೋರಾಟಕ್ಕೆ ಧುಮುಕಬೇಕು. ಗಲ್ಲಿ ಗಲ್ಲಿಗಳಲ್ಲಿ, ಬಡಾವಣೆಗಳಲ್ಲಿ ಜನ ಸಮಿತಿ ರಚಿಸಿಕೊಂಡು ಸಂಘಟಿತರಾಗಬೇಕು. ಜನರ ನೈಜ ಬೇಡಿಕೆಗಳಿಗಾಗಿ ಹೋರಾಟಗಳನ್ನು ಬೆಳೆಸುತ್ತಾ, ಬಂಡವಾಳಶಾಹಿ ವ್ಯವಸ್ಥೆಯನ್ನು ಕೊನೆಗೊಳಿಸುವ ಸಮಾಜವಾದಿ ಹೋರಾಟಕ್ಕೂ ತಯಾರಾಗಬೇಕಿದೆ. ಇದೊಂದೆ ಜನರಿಗಿರುವ ದಾರಿ” ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಎಸ್.ಯು.ಸಿ.ಐ ಕಮ್ಯುನಿಸ್ಟ್ ಪಕ್ಷದ ಜಿಲ್ಲಾ ಸಮಿತಿ ಸದಸ್ಯರಾದ ಗೋವಿಂದ್, ಶಾಂತಾ, ಸದಸ್ಯರಾದ ಜಗದೀಶ್, ಈಶ್ವರಿ, ವಿಜಯಲಕ್ಷ್ಮಿ, ರಾಜಾ, ರವಿಕಿರಣ್ ಪಕ್ಷದ ಬೆಂಬಲಿಗರು, ನಾಗರಿಕರು ಪಾಲ್ಗೊಂಡಿದ್ದರು.

0 Comments