ರೈತ ಮುಖಂಡ ರಾಕೇಶ್ ಟಿಕಾಯತ್ ಮೇಲೆ ಕಿಡಿಗೇಡಿಗಳು ಹಲ್ಲೆ ಮಾಡಿರುವುದು ಖಂಡನೀಯವಾಗಿದ್ದು, ಸೂಕ್ತ ಭದ್ರತೆ ನೀಡುವುದರಲ್ಲಿ ವಿಫಲವಾದ ರಾಜ್ಯ ಸರ್ಕಾರವೇ ಘಟನೆಗೆ ಕಾರಣ ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಹೇಳಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಪೃಥ್ವಿ ರೆಡ್ಡಿ, “ರಾಷ್ಟ್ರಮಟ್ಟದ ರೈತ ನಾಯಕ ರಾಕೇಶ್ ಟಿಕಾಯತ್ರವರು ಬೆಂಗಳೂರಿಗೆ ಆಗಮಿಸಿದ ಸಂದರ್ಭದಲ್ಲಿ ರಾಜ್ಯ ಸರ್ಕಾರವು ಸೂಕ್ತ ಭದ್ರತೆ ಒದಗಿಸಬೇಕಿತ್ತು. ಆದರೆ ರಾಜ್ಯ ಸರ್ಕಾರ ತೋರಿದ ನಿರ್ಲಕ್ಷ್ಯದಿಂದಾಗಿ ಅಹಿತಕರ ಘಟನೆ ನಡೆದಿದೆ. ಇದರಿಂದಾಗಿ ಕರ್ನಾಟಕದ ಗೌರವಕ್ಕೆ ರಾಷ್ಟ್ರಮಟ್ಟದಲ್ಲಿ ಧಕ್ಕೆಯಾಗಿದೆ. ಗೃಹ ಸಚಿವರ ಅಸಮರ್ಥತೆಯಿಂದಾಗಿ ಗುಪ್ತಚರ ಇಲಾಖೆ ನಿಷ್ಕ್ರಿಯವಾಗಿರುವುದು ಇದರಿಂದ ಸ್ಪಷ್ವವಾಗುತ್ತದೆ” ಎಂದು ಹೇಳಿದರು.
“ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ರೈತವಿರೋಧಿ ಮಸೂದೆಗಳ ವಿರುದ್ಧ ಬೃಹತ್ ಚಳವಳಿ ರೂಪಿಸುವುದರಲ್ಲಿ ರಾಕೇಶ್ ಟಿಕಾಯತ್ ಪ್ರಮುಖ ಪಾತ್ರ ವಹಿಸಿದ್ದರು. ಅವರ ನೇತೃತ್ವದಲ್ಲಿ ನಡೆದ ಚಳವಳಿಗೆ ಹೆದರಿ ಪ್ರಧಾನಿ ಮೋದಿಯವರ ಸರ್ಕಾರವು ಕರಾಳ ಕಾಯಿದೆಗಳನ್ನು ಹಿಂಪಡೆಯಿತು. ಇಂತಹ ರೈತ ನಾಯಕನ ಮೇಲೆ ಕಿಡಿಗೇಡಿಗಳು ದಾಳಿ ಮಾಡಿರುವುದು ಖಂಡನೀಯ. ಇದೊಂದು ರಾಜಕೀಯ ಪ್ರೇರಿತ ದಾಳಿ ಎನ್ನುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಆರೋಪಿಗಳನ್ನು ತನಿಖೆಗೆ ಒಳಪಡಿಸಿ, ಘಟನೆಯ ಹಿಂದೆ ಯಾರಿದ್ದಾರೆ ಎಂಬುದನ್ನು ಪತ್ತೆ ಹಚ್ಚಬೇಕು. ತಪ್ಪಿತಸ್ಥರನ್ನು ಕಠಿಣ ಶಿಕ್ಷೆಗೆ ಒಳಪಡಿಸಬೇಕು” ಎಂದು ಪೃಥ್ವಿ ರೆಡ್ಡಿ ಆಗ್ರಹಿಸಿದರು.

0 Comments