ಬೆಂಗಳೂರು, ಮೇ 16 (ಕರ್ನಾಟಕ ವಾರ್ತೆ) : ಮೊದಲ ಬಾರಿಗೆ ಥಾಮಸ್ ಕಪ್ ಗೆಲ್ಲುವ ಮೂಲಕ ಐತಿಹಾಸಿಕ ದಾಖಲೆ ನಿರ್ಮಿಸಿದ ಭಾರತ ತಂಡಕ್ಕೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ಅಭಿನಂದನೆ ಸಲ್ಲಿಸಿದ್ದಾರೆ.
ಬ್ಯಾಂಕಾಕ್ ನಲ್ಲಿ ನಡೆದ ಥಾಮಸ್ ಕಪ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಇಂಡೋನೇಷ್ಯಾವನ್ನು ಮಣಿಸಿದ ಭಾರತ ತಂಡ ಮೊದಲ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಚಿನ್ನದ ಪದಕ ಪಡೆಯುವ ಮೂಲಕ ಭಾರತ ತಂಡ ಐತಿಹಾಸಿಕ ಸಾಧನೆ ಮಾಡಿದೆ.
ಥಾಮಸ್ ಕಪ್ ಗೆದ್ದ ಟೀಂನಲ್ಲಿ ಬೆಂಗಳೂರಿಗ: ಲಕ್ಷ್ಯ ಸೇನ್ಗೆ ಕರ್ನಾಟಕ ಸರ್ಕಾರದಿಂದ ಸನ್ಮಾನ
ಚಾಂಪಿಯನ್ ಇಂಡೋನೇಷ್ಯಾ ತಂಡವನ್ನು ಬಗ್ಗು ಬಡಿದ ಭಾರತದ ತಂಡದಲ್ಲಿ ಬೆಂಗಳೂರಿನ ಆಟಗಾರ ಇರುವುದು ಕರ್ನಾಟಕಕ್ಕೆ ಮತ್ತಷ್ಟು ಹೆಮ್ಮೆ ತರಿಸಿದೆ ಎಂದು ಸಚಿವ ಡಾ.ನಾರಾಯಣಗೌಡ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಥಾಮಸ್ ಕಪ್ ಮುಡಿಗೇರಿಸಿಕೊಂಡ ಭಾರತದ ತಂಡದಲ್ಲಿ ಬೆಂಗಳೂರಿನ ದ್ರಾವಿಡ್ ಪಡುಕೊಣೆ ಸ್ಪೋರ್ಟ್ಸ್ ಸೆಂಟರ್ನಲ್ಲಿ ತರಬೇತಿ ಪಡೆಯುತ್ತಿರುವ ಲಕ್ಷ್ಯ ಸೇನ್ ಕೂಡ ಒಬ್ಬರಾಗಿದ್ದಾರೆ.
ಮೊದಲ ಸುತ್ತಿನಲ್ಲಿ ಲಕ್ಷ್ಯ ಸೇನ್ ಅವರು ಮೊದಲ ಸಿಂಗಲ್ಸ್ನಲ್ಲಿ ಆ್ಯಂಟನಿ ಜಿಂಟಿಂಗ್ ವಿರುದ್ಧ 8-21, 21-17,21-16 ಅಂಕಗಳೊಂದಿಗೆ ಗೆಲುವು ದಾಖಲಿಸಿದ್ದಾರೆ.
ಥಾಮಸ್ ಕಪ್ - 2022 ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಮೊದಲ ಬಾರಿಗೆ ಚಿನ್ನ ಗೆದ್ದ ಭಾರತ ತಂಡಕ್ಕೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಥಾಮಸ್ ಕಪ್ನಲ್ಲಿ ಮೊದಲ ಬಾರಿಗೆ ಚಿನ್ನ ಗೆಲ್ಲುವ ಮೂಲಕ ಭಾರತೀಯ ತಂಡ ಐತಿಹಾಸಿಕ ಸಾಧನೆ ಮಾಡಿದೆ. 13 ಬಾರಿ ಚಾಂಪಿಯನ್ ಇಂಡೊನೇಷ್ಯಾ ತಂಡವನ್ನು ಮಣಿಸಿರುವ ಭಾರತ ತಂಡದ ಆಟಗಾರರ ಆಟ ಶ್ಲಾಘನೀಯ. ಈ ಐತಿಹಾಸಿಕ ಗೆಲುವು ನಮ್ಮ ದೇಶದ ಯುವಜನತೆ, ಕ್ರೀಡಾ ಪಟುಗಳಿಗೆ ಸ್ಫೂರ್ತಿ ತುಂಬಲಿದೆ. ಭಾರತದ ಗೆಲುವಿನಲ್ಲಿ ತಮ್ಮದೇ ಕೊಡುಗೆ ನೀಡಿರುವ ಬೆಂಗಳೂರಿಗ ಲಕ್ಷ್ಯ ಸೇನ್ ಅವರಿಗೆ ನಮ್ಮ ಸರ್ಕಾರದ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ. ಹಾಗೂ ನಮ್ಮ ರಾಜ್ಯ ಸರ್ಕಾರದ ವತಿಯಿಂದ ಲಕ್ಷ್ಯ ಸೇನ್ ಅವರನ್ನು ಸನ್ಮಾನಿಸಿ ಗೌರವಿಸಲಾಗುವುದು ಎಂದು ಸಚಿವ ಡಾ.ನಾರಾಯಣಗೌಡ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
0 Comments