ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ಸಂಘದ ಮನವಿ ಮೇರೆಗೆ ಧಾರವಾಡ ಪತ್ರಕರ್ತ ಫಕೀರಪ್ಪ ಪ್ರಕಾಶ್ ಮಹಾಜನ ಶೆಟ್ಟರ್ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2 ಲಕ್ಷ ರೂ ಪರಿಹಾರ ಮಂಜೂರು ಮಾಡಿದ್ದಾರೆ.
ಪ್ರಕಾಶ್ ಮಹಾಜನ ಶೆಟ್ಟರ್ ಅವರು ಸಂಜೆವಾಣಿ, ಡೈಲಿ ಸಾಲಾರ್ ಸೇರಿದಂತೆ ಹಲವು ಪತ್ರಿಕೆಗಳಲ್ಲಿ 2 ದಶಕಗಳಿಗೂ ಹೆಚ್ಚು ಕಾಲ ಪತ್ರಕರ್ತರಾಗಿ ಸೇವೆ ಸಲ್ಲಿಸಿದ್ದಾರೆ.
ಹಿಮೊಫೋಲಿಯಾ (ರಕ್ತ ಹೆಪ್ಪುಗಟ್ಟದಂತ ) ಖಾಯಿಲೆಯಿಂದ ಬಳಲುತ್ತಿರುವ ಅವರ ಚಿಕಿತ್ಸೆಗೆ ಸುಮಾರು 10 ಲಕ್ಷಕ್ಕೂ ಹೆಚ್ಚು ವೆಚ್ಚವಾಗಲಿದ್ದು, ಅವರು ಸಂಕಷ್ಟದಲ್ಲಿರುವ ಬಗ್ಗೆ ಧಾರವಾಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ರಾಜ್ಯ ಸಂಘದ ಗಮನಕ್ಕೆ ತಂದಿತ್ತು. ಪ್ರಕಾಶ್ ಮಹಾಜನ ಶೆಟ್ಟರ್ ಅವರು ತೀವ್ರ ಆರ್ಥಿಕ ಸಂಕಷ್ಟದಲ್ಲಿರುವ ಕಾರಣ ತುರ್ತು ನೆರವು ನೀಡುವಂತೆ ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಂಡಿದ್ದರು.
ಕೆಯುಡಬ್ಲ್ಯೂಜೆ ಮನವಿ ಪರಿಗಣಿಸಿರುವ ಸಿಎಂ, ಮಾನವೀಯ ದೃಷ್ಟಿಯಿಂದ ಚಿಕಿತ್ಸೆ ಭಾಗವಾಗಿ 2 ಲಕ್ಷ ರೂ ಪರಿಹಾರ ಮಂಜೂರು ಮಾಡಿದ್ದಾರೆ. ಪರಿಹಾರ ಮಂಜೂರು ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಕೃತಜ್ಞತೆಗಳನ್ನು ಸಲ್ಲಿಸಿದೆ.
0 Comments