ಬೆಂಗಳೂರು, ಜುಲೈ 01 (ಕರ್ನಾಟಕ ವಾರ್ತೆ) : ಕರ್ನಾಟಕದ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾದ ರಿತುರಾಜ್ ಅವಸ್ಥಿ ಅವರಿಗೆ ಕರ್ನಾಟಕ ಸ್ಟೇಟ್ ಬಾರ್ ಕೌನ್ಸಿಲ್ ವತಿಯಿಂದ ಇಂದು ಆತ್ಮೀಯ ಬೀಳ್ಕೊಡುಗೆ ನೀಡಲಾಯಿತು.
ಇಂದು ಕರ್ನಾಟಕ ಉಚ್ಛ ನ್ಯಾಯಾಲಯದ ಕೋರ್ಟ್ ಹಾಲ್ ನಂ. 1 ರಲ್ಲಿ ಹಮ್ಮಿಕೊಳ್ಳಲಾದ ಬೀಳ್ಕೊಡುಗೆ ಸಮಾರಂಭದಲ್ಲಿ ಬೀಳ್ಕ್ಕೊಡುಗೆ ಸ್ವೀಕರಿಸಿ ಮಾತನಾಡಿದ ಮುಖ್ಯ ನ್ಯಾಯಮೂರ್ತಿಗಳು, ತಮ್ಮ ವೃತ್ತಿ ಜೀವನದಲ್ಲಿ 42 ಸಾವಿರಕ್ಕೂ ಹೆಚ್ಚು ಪ್ರಕರಣಗಳನ್ನು ಇತ್ಯರ್ಥಗೊಳಿಸಿ ನ್ಯಾಯಾಲಯದಲ್ಲಿ ಸಾಮಾಜಿಕ ಬದ್ಧತೆ ಹಾಗೂ ಸಮಾನತೆಯನ್ನು ಎತ್ತಿ ಹಿಡಿದಿರುವುದಾಗಿ ತಿಳಿಸಿದರು.
ಕರ್ನಾಟಕ ಉಚ್ಛ ನ್ಯಾಯಾಲಯದಲ್ಲಿ ಕಳೆದ ಅಕ್ಟೋಬರ್ 2021 ರಿಂದ ಸೇವೆ ಸಲ್ಲಿಸಿರುವುದು ನನಗೆ ತುಂಬಾ ಸಂತಸ ತಂದು ಕೊಟ್ಟಿದೆ. ವಕೀಲರಾಗಲೀ, ನ್ಯಾಯಾಧೀಶರಾಗಲೀ ನ್ಯಾಯದ ಪರ ಅಂತಃಕರಣದಲ್ಲಿ ಕೆಲಸ ನಿರ್ವಹಿಸಬೇಕು. ತಮ್ಮ ವೃತ್ತಿಯಲ್ಲಿ ಇಲ್ಲಿಯವರೆಗೂ ನನಗೆ ಎಲ್ಲಾ ವಿಧದಲ್ಲೂ ಸಹಕಾರ ಕೊಟ್ಟ ಪ್ರತಿಯೊಬ್ಬರಿಗೂ ನನ್ನ ಹೃದಯಪೂರ್ವಕ ಕೃತಜ್ಞತೆಗಳು ಎಂದು ಮುಖ್ಯ ನ್ಯಾಯಮೂರ್ತಿಗಳು ತಿಳಿಸಿದರು.
30 ವರ್ಷಗಳಿಗೂ ಅಧಿಕ ವರ್ಷ ವಕೀಲರಾಗಿ, ನ್ಯಾಯಮೂರ್ತಿಗಳಾಗಿ ರಿತುರಾಜ್ ಅವಸ್ಥಿ ಅವರು ಸೇವೆ ಸಲ್ಲಿಸಿದ್ದಾರೆ. ಅವರು ಈ ಹಿಂದೆ ಅಲಹಾಬಾದ್ ಹೈಕೋರ್ಟ್ನಲ್ಲಿ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಸೇವೆ ಸಲ್ಲಿಸಿದ್ದಾರೆ. ಕರ್ನಾಟಕ ಉಚ್ಛ ನ್ಯಾಯಾಲಯ ಮತ್ತು ಮುಖ್ಯ ನ್ಯಾಯಮೂರ್ತಿಗಳಾಗಿ ಅಕ್ಟೋಬರ್ 11, 2021 ರಂದು ಪ್ರಮಾಣವಚನ ಸ್ವೀಕರಿಸಿ, ಈಗ ವಯೋನಿವೃತ್ತಿ ಹೊಂದಿದ್ದಾರೆ.
ಸಮಾರಂಭದಲ್ಲಿ ಕರ್ನಾಟಕ ಸ್ಟೇಟ್ ಬಾರ್ ಕೌನ್ಸಿಲ್ನ ಅಧ್ಯಕ್ಷರು ಹಾಗೂ ಹಿರಿಯ ನ್ಯಾಯಮೂರ್ತಿಗಳಾದ ಅಲೋಕ್ ಅರಾದೆ, ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳು ಹಾಗೂ ವಕೀಲರು ಉಪಸ್ಥಿತರಿದ್ದರು.
0 Comments