Ticker

6/recent/ticker-posts

Ad Code

Responsive Advertisement

ಶಿವಮೊಗ್ಗ ಗಲಭೆ : ಬಜರಂಗದಳದ ಮೇಲೆ ಕ್ರಮಕ್ಕೆ ಬಿಎಸ್ಪಿ ಆಗ್ರಹ

ಶಿವಮೊಗ್ಗದ ಅಮೀರ್ ಅಹಮದ್ ವೃತ್ತದಲ್ಲಿ ಸಾರ್ವರ್ಕರ್ ಫ್ಲೆಕ್ಸ್ ಹಾಕಿ ಗಲಭೆಗೆ ಕಾರಣರಾದ ಬಜರಂಗದಳದ ಮುಖಂಡರು ಮತ್ತು ಕಾರ್ಯಕರ್ತರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಬಹುಜನ ಸಮಾಜ ಪಾರ್ಟಿ ರಾಜ್ಯಾಧ್ಯಕ್ಷ ಎಂ. ಕೃಷ್ಣಮೂರ್ತಿ ಆಗ್ರಹಿಸಿದ್ದಾರೆ.


ಬಿಜೆಪಿಯು ಯಡಿಯೂರಪ್ಪ ರವರನ್ನು ಬದಲಾಯಿಸಿ, ಬಸವರಾಜ ಬೊಮ್ಮಾಯಿ ಅವರನ್ನು ಮುಖ್ಯಮಂತ್ರಿ ಮಾಡಿದ ಮೇಲೆ ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಆಡಳಿತ ಸಂಪೂರ್ಣ ಕುಸಿದಿದೆ.

ಇದರ ಭಾಗವಾಗಿಯೇ ಬಜರಂಗದಳದ ಕಾರ್ಯಕರ್ತರು ಉದ್ದೇಶಪೂರ್ವಕವಾಗಿ ರಾಜ್ಯದಲ್ಲಿ ಅಶಾಂತಿ ಸೃಷ್ಟಿಸಲು ಮುಸ್ಲಿಂ ಬಾಹಳ್ಯ ಇರುವ ಶಿವಮೊಗ್ಗದ ಅಮೀರ್ ಅಹ್ಮದ್ ವೃತ್ತದಲ್ಲಿ ಸಾರ್ವರ್ಕರ್ ಫ್ಲೆಕ್ಸ್ ಅಳವಡಿಸಿದ್ದಾರೆ.

ಇದರಿಂದಾದ ಗಲಭೆಯಿಂದ ಪ್ರೇಮ ಸಿಂಗ್ ಎಂಬುವರ ಮೇಲೆ ದುಷ್ಕರ್ಮಿಗಳು ಚೂರಿ ಹಾಕಿದ್ದಾರೆ.

ಈ ಸಂಬಂಧ ಕಿಡಿ ಗೇಡಿಗಳನ್ನು ಪೊಲೀಸರು ಬಂಧಿಸಿರುವುದು ಸ್ವಾಗತಾರ್ಹ ಎಂದಿದ್ದಾರೆ.

ಆದರೆ ಗಲಭೆಗೆ ಮೂಲ ಕಾರಣರಾದ ಫೇಕ್ಸ್ ಅಳವಡಿಸಿದ ಬಜರಂಗದಳದ ಕಾರ್ಯಕರ್ತರ ಮೇಲೆ ಕ್ರಮ ಕೈಗೊಳ್ಳದಿರುವುದು ಸರ್ಕಾರದ ಇಬ್ಬಂದಿ ನೀತಿಗೆ ಸಾಕ್ಷಿಯಾಗಿದೆ ಎಂದು ಟೀಕಿಸಿದ್ದಾರೆ. ಈ ಹಿಂದೆ ಶಿವಮೊಗ್ಗದಲ್ಲಿ ಹರ್ಷನ ಕೊಲೆ ನಡೆದು ರಾಜ್ಯಾದ್ಯಂತ ಉದ್ವಿಗ್ನ ವಾತಾವರಣ ಸೃಷ್ಟಿಯಾಗಿತ್ತು.

ಆ ಘಟನೆ ಮಾಸುವ ಮೊದಲೇ ಮಂಗಳೂರಿನಲ್ಲಿ ಮೂರು ಸರಣಿ ಹತ್ಯೆಗಳು ನಡೆದು ರಾಜ್ಯಾದ್ಯಂತ ಅಶಾಂತ ವಾತಾವರಣ ಸೃಷ್ಟಿಯಾಗಿತ್ತು. ಈಗ ಮತ್ತೆ ಉದ್ದೇಶಪೂರ್ವಕವಾಗಿ ಬಿಜೆಪಿ ಮತ್ತು ಸಂಘ ಪರಿವಾರದ ಕಾರ್ಯಕರ್ತರು ರಾಜ್ಯದಲ್ಲಿ ಕೋಮುಗಲಭೆ ಸೃಷ್ಟಿಸುವ ಸಂಚಿನ ಭಾಗವಾಗಿ ಶಿವಮೊಗ್ಗದಲ್ಲಿ ಫ್ಲೆಕ್ಸ್ ವಿವಾದ ನಡೆದಿದೆ. ಬಿಜೆಪಿ ಸರ್ಕಾರ ಉತ್ತಮ ಆಡಳಿತ ನೀಡುವ ಬದಲು ವಿವಾದಗಳನ್ನು ಇಟ್ಟುಕೊಂಡು ಚುನಾವಣೆಗೆ ಹೋಗುವ ಹುನ್ನಾರ ನಡೆಸಿದಂತೆ ಕಾಣುತ್ತಿದೆ.

ಪಿಎಸ್ಐ ನೇಮಕಾತಿ ಹಗರಣ, ಸಹಾಯಕ ಪ್ರಾಧ್ಯಾಪಕರ ನೇಮಕಾತಿಯ ಹಗರಣ, 40% ಕಮಿಷನ್ ಆರೋಪ ಹಾಗೂ ಸ್ವತಹ ಬಿಜೆಪಿ ಸರ್ಕಾರದ ಮಂತ್ರಿ ಮಾಧುಸ್ವಾಮಿ ಹೇಳಿದಂತೆ ಈ ಸರ್ಕಾರ ನಿಷ್ಕ್ರಿಯವಾಗಿದೆ ಎಂಬ ವಿವಾದಗಳಿಂದ ತತ್ತರಿಸಿರುವ ಬಿಜೆಪಿಯು ರಾಜ್ಯದಲ್ಲಿ ಕೋಮು ಗಲಭೆಗಳನ್ನು ಸೃಷ್ಟಿಸಿ ಜನರನ್ನು ದಿಕ್ಕು ತಪ್ಪಿಸಿ ಮತ್ತೊಮ್ಮೆ ಅಧಿಕಾರಕ್ಕೆ ಬರುವ ಹುನ್ನಾರ ನಡೆಸಿದೆ ಎಂದಿದ್ದಾರೆ.

ಹಾಗಾಗಿಯೇ ದೇಶಾದ್ಯಂತ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ಆಚರಿಸುತ್ತಿರುವ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಮಾಜಿ ಸಚಿವ ಈಶ್ವರಪ್ಪನವರ ತವರು ಜಿಲ್ಲೆಯಲ್ಲಿ ಫ್ಲೆಕ್ಸ್ ವಿವಾದ ಸೃಷ್ಟಿಯಾಗಿರುವುದು ಆಕಸ್ಮಿಕವಲ್ಲ ಅನಿಸುತ್ತದೆ.

ಆದ್ದರಿಂದ ಪ್ರೇಮ್ ಸಿಂಗ್ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿಗಳನ್ನು ಬಂಧಿಸಿದ ರೀತಿಯಲ್ಲಿ ಫ್ಲೆಕ್ಸ್ ಅಳವಡಿಸಿ ಗಲಭೆಗೆ ಕಾರಣರಾದ  ದುಷ್ಕರ್ಮಿಗಳನ್ನು ಸಹ ಕೂಡಲೇ ಬಂಧಿಸಬೇಕು ಎಂದು ಬಹುಜನ ಸಮಾಜ ಪಾರ್ಟಿ, ಆಗ್ರಹಿಸುತ್ತದೆ.

ಹಾಗೆಯೇ ರಾಜಸ್ಥಾನದಲ್ಲಿ ಕುಡಿಯುವ ನೀರಿನ ಮಡಕೆ ಮುಟ್ಟಿದ ಕಾರಣಕ್ಕೆ ಮುಖ್ಯ ಶಿಕ್ಷಕನಿಂದ ಹಲ್ಲೆಗೊಳಗಾಗಿ ದಲಿತ ವಿದ್ಯಾರ್ಥಿ ಪ್ರಾಣ ಕಳೆದುಕೊಂಡ ಘಟನೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯಾಗಲಿ, ಗೃಹ ಮಂತ್ರಿ ಅಮಿತ್ ಶಾ ಆಗಲಿ ಚಕಾರ ಎತ್ತದಿರುವುದು  ದಲಿತರ ಮೇಲಿನ ನಿಷ್ಕಾಳಜಿಗೆ ಸಾಕ್ಷಿಯಾಗಿದೆ. ಬಿಜೆಪಿಯ ದಲಿತ ವಿರೋಧಿ ನೀತಿಯನ್ನು ಬಹುಜನ ಸಮಾಜ ಪಕ್ಷ ಖಂಡಿಸುತ್ತದೆ ಎಂದಿದ್ದಾರೆ.

ಹಾಗೆಯೇ ಕಾಂಗ್ರೆಸೇತರ ಸರ್ಕಾರವಿರುವ ರಾಜ್ಯಗಳಲ್ಲಿ ದಲಿತರ ಮೇಲೆ ಹಲ್ಲೆ ನಡೆದರೆ ತಕ್ಷಣ ಪ್ರತಿಕ್ರಿಯಿಸುವ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಹಾಗೂ ಸಿದ್ದರಾಮಯ್ಯ ತಮ್ಮದೇ ಕಾಂಗ್ರೆಸ್ ಸರ್ಕಾರವಿರುವ ರಾಜ್ಯದಲ್ಲಿ ನಡೆದಿರುವ ಈ ಘಟನೆಯ ಬಗ್ಗೆ ಮೌನವಾಗಿರುವುದನ್ನು ಖಂಡಿಸಿದ್ದಾರೆ.

ಘಟನೆ ಖಂಡಿಸಿ ಕಾಂಗ್ರೆಸ್ ಶಾಸಕ ಪನ ಚಂದ್ ಮೇಘವಾಲ್ ರಾಜಿನಾಮೆ ನೀಡಿರುವುದನ್ನು ಬಹುಜನ ಸಮಾಜ ಪಾರ್ಟಿ ಸ್ವಾಗತಿಸುತ್ತದೆ ಎಂದಿದ್ದಾರೆ. ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ದೇಶ ಆಚರಿಸುತ್ತಿರುವ ಸಂದರ್ಭದಲ್ಲಿಯೂ ಸಹ, ವಿದ್ಯಾವಂತರು ಅಸ್ಪೃಶ್ಯತೆಯನ್ನು ಹೇಗೆ ಇನ್ನೂ ಆಚರಿಸುತ್ತಿದ್ದಾರೆ ಎಂಬುದಕ್ಕೆ ಸಾಕ್ಷಿಯಾಗಿದೆ.

ದಲಿತರಿಗೆ ಮೀಸಲಾತಿ ಏಕೆ ಬೇಕು ಎಂದು ಚೀರಾಡುವ ಜನ ಇನ್ನಾದರೂ ಆತ್ಮವಲೋಕನ ಮಾಡಿಕೊಂಡು ಜಾತಿ ಮತ್ತು ಅಸ್ಪೃಶ್ಯತೆ ನಿವಾರಣೆಗೆ ಮುಂದಾಗಲಿ ಎಂದು ಬಹುಜನ ಸಮಾಜ ಪಾರ್ಟಿ ಒತ್ತಾಯಿಸುತ್ತದೆ ಎಂದಿದ್ದಾರೆ.


Post a Comment

0 Comments

Ad Code

Responsive Advertisement