ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ರಾಮನಗರ ಹಾಗೂ ಚನ್ನಪಟ್ಟಣದ ಪ್ರವಾಹ ಪೀಡಿತ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಕಂದಾಯ ಸಚಿವ ಆರ್. ಅಶೋಕ್, ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ, ಮಾಜಿ ಮುಖ್ಯಮಂತ್ರಿ ಹಾಗೂ ಚನ್ನಪಟ್ಟಣ ಶಾಸಕ ಹೆಚ್. ಡಿ. ಕುಮಾರಸ್ವಾಮಿ, ರಾಮನಗರ ಶಾಸಕಿ ಅನಿತಾ ಕುಮಾರಸ್ವಾಮಿ ಜೊತೆಗಿದ್ದರು.
ಈ ಸಂದರ್ಭದಲ್ಲಿ ರಾಮನಗರ ಮಾರುತಿ ಬಡಾವಣೆಯಲ್ಲಿ ಭಕ್ಷಿ ಕೆರೆ ಒಡೆದು ಅಪಾರ ಪ್ರಮಾಣದ ಬೆಳೆ ಹಾನಿಯಾಗಿರುವುದನ್ನು ಪರಿಶೀಲಿಸಿದರು. ನಂತರ ನೇರವಾಗಿ ಸುಮಾರು ಅರ್ಧ ಕಿ.ಮೀ. ಮುಖ್ಯಮಂತ್ರಿಗಳು ರೈಲ್ವೆ ಟ್ರ್ಯಾಕ್ ಮೇಲೆ ಕಾಲ್ನಡಿಗೆಯಲ್ಲಿ ಹೋದರು. ಭಕ್ಷಿ ಕೆರೆ ಒಡೆದಿರುವ ಜಾಗದಿಂದ ರೈತರ ಮನೆಗೆ ಭೇಟಿ ಕೊಟ್ಟು ಪರಿಹಾರ ನೀಡುವ ಭರವಸೆ ನೀಡಿದರು.
ಬಿದ್ದಿರುವ ಮನೆಗಳಿಗೆ ತಕ್ಷಣ 1 ಲಕ್ಷ ರೂ. ಹಾಗೂ ಒಟ್ಟಾರೆ 5 ಲಕ್ಷ ರೂ. ಪರಿಹಾರವನ್ನು ಹಂತ ಹಂತವಾಗಿ ನೀಡಲಾಗುವುದು ಎಂದು ತಿಳಿಸಿದರು.
ಸ್ಥಳದಲ್ಲಿಯೇ ಜನರ ಸಮಸ್ಯೆಗಳಿಗೆ ಪರಿಹಾರ ನೀಡುವುದಾಗಿ ಭರವಸೆ ನೀಡಿದರು. ಭಕ್ಷಿ ಕೆರೆಯನ್ನು ದುರಸ್ತಿ ಮಾಡಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಕಂದಾಯ ಸಚಿವ ಅಶೋಕ್, ಜಿಲ್ಲಾ ಉಸ್ತುವಾರಿ ಸಚಿವ ಅಶ್ವತ್ಥನಾರಾಯಣ, ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಶಾಸಕಿ ಅನಿತಾ ಕುಮಾರಸ್ವಾಮಿ ಉಪಸ್ಥಿತರಿದ್ದರು.


0 Comments