ತುಮಕೂರು: ಗ್ರಾಮಾಂತರ ಕ್ಷೇತ್ರದ ಬಿಜೆಪಿ ಮಾಜಿ ಶಾಸಕ ಬಿ.ಸುರೇಶ್ ಗೌಡ ಅವರನ್ನು ಕೊಲೆ ಮಾಡಲು ಸುಪಾರಿ ಕೊಟ್ಟಿದ್ದಾರೆ ಎಂಬ ಆರೋಪದ ಮೇಲೆ ತುಮಕೂರು ಗ್ರಾಮಾಂತರದ ಹಾಲಿ ಜೆಡಿಎಸ್ ಶಾಸಕ ಡಿಸಿ ಗೌರಿಶಂಕರ್ ಸೇರಿ ಮೂವರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಸುರೇಶ್ ಗೌಡರು ಕೊಟ್ಟ ದೂರಿನ ಅನ್ವಯ ತುಮಕೂರಿನ ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಗೌರಿಶಂಕರ್ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಹಿರೇಹಳ್ಳಿ ಮಹೇಶ್, ಜೆಡಿಎಸ್ ಶಾಸಕ ಗೌರಿಶಂಕರ, ಅಟ್ಟಿಕಾ ಗೋಲ್ಡ್ ಕಂಪನಿಯ ಮಾಲೀಕ ಅಟ್ಟಿಕಾ ಬೊಮ್ಮನಹಳ್ಳಿ ಬಾಬು ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಶಾಸಕ ಅಕ್ರಮ ಎಸಗಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ ಎಂದು ಆರೋಪಿಸಿ ಪರಾಜಿತ ಅಭ್ಯರ್ಥಿ ಸುರೇಶ್ ಗೌಡ ಆಯೋಗಕ್ಕೆ ದೂರು ನೀಡಿದ್ದರು. ಅಲ್ಲದೇ ನಕಲಿ ಬಾಂಡ್ ಹಂಚಿ ಮತದಾರರಿಗೆ ಮೋಸ ಮಾಡಿದ್ದಾರೆ ಎಂದು ದೂರಿದ್ದರು. ಈ ದೂರಿನಿಂದ ಗೌರಿಶಂಕರ ಕೆರಳಿ ನನ್ನ ಕೊಲೆ ಮಾಡಲು ಸುಪಾರಿ ನೀಡಿದ್ದಾರೆ ಎಂದು ಸುರೇಶ್ ಗೌಡ ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ.
ತುಮಕೂರಿನ ಮಾಜಿ ಮೇಯರ್ ಗಡ್ಡ ರವಿಯನ್ನು ಕೊಲೆ ಮಾಡಿ ಜೈಲಿನಲ್ಲಿದ್ದ ರೌಡಿಶೀಟರ್ ಸುಜಯ್ ಭಾರ್ಗವ್ಗೆ ಸುಮಾರು ೫ ಕೋಟಿ ರೂ.ಗೆ ಸುಪಾರಿ ನೀಡಲಾಗಿದೆ. ಅದರ ವೆಚ್ಚವನ್ನು ತುಮಕೂರು ನಗರ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಅಟ್ಟಿಕಾ ಗೋಲ್ಡ್ ಕಂಪನಿಯ ಮಾಲೀಕ ಅಟ್ಟಿಕಾ ಬಾಬು ಭರಿಸುವ ಪ್ಲಾನ್ ಮಾಡಿದ್ದಾರೆ ಎಂದು ದೂರಲಾಗಿದೆ. ಅಲ್ಲದೇ ಭಾರಿ ವಾಹನ ಹತ್ತಿಸಿ ಕೊಲೆ ಮಾಡಿ ಅಪಘಾತ ಎಂದು ಬಿಂಬಿಸುವ ಸಂಚು ರೂಪಿಸಿದ್ದಾರೆ ಎಂದು ಸುರೇಶ್ ಗೌಡ ದೂರಿದ್ದಾರೆ ಎಂದಿದ್ದಾರೆ.
0 Comments