Ticker

6/recent/ticker-posts

Ad Code

Responsive Advertisement

BIG NEWS : ಬಿ. ಎಸ್. ವೈ. ಪುತ್ರ ವಿಜಯೇಂದ್ರ ಶಿಕಾರಿಪುರದಿಂದ ಕಣಕ್ಕೆ

ಶಿವಮೊಗ್ಗ, ಏಪ್ರಿಲ್ 11; ವಿಧಾನಸಭೆ ಚುನಾವಣೆಗೆ 189 ಅಭ್ಯರ್ಥಿಗಳ ಬಿಜೆಪಿಯ ಮೊದಲ ಪಟ್ಟಿ ಬಿಡುಗಡೆಯಾಗಿದ್ದು, ಮಂಗಳವಾರ ರಾತ್ರಿ ಅಭ್ಯರ್ಥಿಗಳ ಪಟ್ಟಿಯನ್ನು ನವದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಬಿಡುಗಡೆ ಮಾಡಿದರು. ವರುಣ ಕ್ಷೇತ್ರದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಎದುರಾಳಿ ವಿ. ಸೋಮಣ್ಣ ಹೆಸರು ಘೋಷಣೆ ಮಾಡಲಾಗಿದೆ.

ಬಿಜೆಪಿ ಇನ್ನೂ 35 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಬಾಕಿ ಉಳಿಸಿಕೊಂಡಿದೆ. ಏಪ್ರಿಲ್ 13ರಂದು ಚುನಾವಣಾ ಅಧಿಸೂಚನೆ ಪ್ರಕಟವಾಗಲಿದ್ದು, ಏಪ್ರಿಲ್ 20ರ ತನಕ ನಾಮಪತ್ರಗಳನ್ನು ಸಲ್ಲಿಕೆ ಮಾಡಲು ಅವಕಾಶವಿದೆ. ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಪುತ್ರ ಬಿ. ವೈ. ವಿಜಯೇಂದ್ರ ಶಿಕಾರಿಪುರದಿಂದ ಕಣಕ್ಕಿಳಿಯಲಿದ್ದಾರೆ ಎಂದು ಘೋಷಿಸಲಾಗಿದೆ.

ಶಿಕಾರಿಪುರ ಕ್ಷೇತ್ರದ ಹಾಲಿ ಶಾಸಕರು ಬಿ. ಎಸ್. ಯಡಿಯೂರಪ್ಪ. ಆದರೆ 2023-24ನೇ ಸಾಲಿನ ಬಜೆಟ್ ಅಧಿವೇಶನದಲ್ಲಿಯೇ ಅವರು ಈ ಬಾರಿಯ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ. ಇದು ನನ್ನ ಕೊನೆಯ ಅಧಿವೇಶನ, ಚುನಾವಣಾ ನಿವೃತ್ತಿ ಪಡೆಯುತ್ತೇನೆ ಎಂದು ಘೋಷಣೆ ಮಾಡಿದ್ದರು. ಆದರೆ ರಾಜ್ಯದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲು ಸದಾ ಕೆಲಸ ಮಾಡುತ್ತೇನೆ ಎಂದು ಹೇಳಿದ್ದರು.

ಈ ಬಾರಿಯ ಚುನಾವಣೆಯಲ್ಲಿ ಹೈಕಮಾಂಡ್ ಒಪ್ಪಿಗೆ ನೀಡಿದರೆ ಬಿ. ವೈ. ವಿಜಯೇಂದ್ರ ಶಿಕಾರಿಪುರದಿಂದ ಕಣಕ್ಕಿಳಿಯಲಿದ್ದಾರೆ ಎಂದು ಯಡಿಯೂರಪ್ಪ ಘೋಷಣೆ ಮಾಡಿದ್ದರು. ಬಿಜೆಪಿ ಮೊದಲ ಪಟ್ಟಿಯಲ್ಲಿಯೇ ಶಿಕಾರಿಪುರಕ್ಕೆ ಕರ್ನಾಟಕ ಬಿಜೆಪಿಯ ಉಪಾಧ್ಯಕ್ಷರೂ ಆಗಿರುವ ಬಿ. ವೈ. ವಿಜಯೇಂದ್ರ ಹೆಸರು ಘೋಷಣೆ ಮಾಡಿದೆ.

ಶಿಕಾರಿಪುರ ಬಿ. ಎಸ್. ಯಡಿಯೂರಪ್ಪ ಅವರ ತವರು ಕ್ಷೇತ್ರ. ಒಟ್ಟು 9 ಬಾರಿ ಕ್ಷೇತ್ರದಲ್ಲಿ ಚುನಾವಣೆ ಎದುರಿಸಿರುವ ಅವರು 8 ಬಾರಿ ಗೆದ್ದಿದ್ದಾರೆ. 1999ರ ಚುನಾವಣೆಯಲ್ಲಿ ಕಾಂಗ್ರೆಸ್‍ನ ಮಹಾಲಿಂಗಪ್ಪ ಎದುರು ಅವರು ಸೋಲು ಕಂಡಿದ್ದರು. ಸದ್ಯ ಶಿವಮೊಗ್ಗ ಸಂಸದರಾಗಿರುವ ಯಡಿಯೂರಪ್ಪ ಪುತ್ರ ಬಿ. ವೈ. ರಾಘವೇಂದ್ರ 2014ರ ಉಪ ಚುನಾವಣೆಯಲ್ಲಿ ಶಿಕಾರಿಪುರದಲ್ಲಿ ಗೆಲುವು ಸಾಧಿಸಿದ್ದರು.

ಬಜೆಟ್ ಭಾಷಣದ ಮೇಲೆ ವಿಧಾನಭೆಯಲ್ಲಿ ಮಾತನಾಡಿದ್ದ ಬಿ. ಎಸ್. ಯಡಿಯೂರಪ್ಪ, "ನಾನು ಮತ್ತೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಹಾಗಾಗಿ ನಾನು ಮತ್ತೆ ಈ ಸದನದ ಒಳಗೆ ಬರುವ ಪ್ರಶ್ನೆ ಉದ್ಭವಿಸುವುದಿಲ್ಲ. ಪ್ರಧಾನಿ ಮೋದಿ ಅವರು ಎಲ್ಲ ಅವಕಾಶ, ಸ್ಥಾನಮಾನ ನೀಡಿದ್ದು, ಬದುಕಿನ ಕೊನೆಯ ಉಸಿರು ಇರುವ ತನಕ ಪಕ್ಷವನ್ನು ಅಧಿಕಾರಕ್ಕೆ ತರಲು ಶಕ್ತಿ ಮೀರಿ ಕೆಲಸ ಮಾಡುತ್ತೇನೆ" ಎಂದು ಹೇಳಿದ್ದರು.

ಕರ್ನಾಟಕ ಬಿಜೆಪಿಯ ಮೊದಲ ಪಟ್ಟಿಯಲ್ಲಿ ಬಿ. ವೈ. ವಿಜಯೇಂದ್ರ ಸೇರಿ 52 ಹೊಸಬರಿಗೆ ಅವಕಾಶ ನೀಡಲಾಗಿದೆ. 2018ರ ಚುನಾವಣೆಯಲ್ಲಿಯೇ ವಿಜಯೇಂದ್ರಗೆ ಟಿಕೆಟ್ ನೀಡಬೇಕು ಎಂಬ ಬೇಡಿಕೆ ಇತ್ತು. ಆದರೆ ಕೊನೆ ಕ್ಷಣದಲ್ಲಿ ಅವರಿಗೆ ಟಿಕೆಟ್ ನಿರಾಕರಣೆ ಮಾಡಲಾಗಿತ್ತು. ಆಗ ರಾಜ್ಯದಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗಿತ್ತು. ಆದರೆ ಈ ಬಾರಿ ಅವರಿಗೆ ಟಿಕೆಟ್ ಸಿಗುವುದು ಖಚಿತವಾಗಿತ್ತು.

Post a Comment

0 Comments

Ad Code

Responsive Advertisement