ಬಿಜೆಪಿಯಲ್ಲಿ ಸಾಮೂಹಿಕ ನಾಯಕತ್ವದ ಕೊರತೆ – ರಾಮಲಿಂಗಾ ರೆಡ್ಡಿ.
ಬೆಂಗಳೂರು, ಏ, 20; ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಹಾಲಿ ಅಭ್ಯರ್ಥಿ ಕೆ.ಸಿ. ರಾಮಮೂರ್ತಿ ವಿರುದ್ಧ ಪಕ್ಷದ ನಿಷ್ಠಾವಂತ ನಾಯಕರು ಮತ್ತು ಕಾರ್ಯಕರ್ತರು ಬಂಡಾಯ ಎದ್ದಿದ್ದು, ಇಂದು ಸಾಮೂಹಿಕವಾಗಿ ಕಾಂಗ್ರೆಸ್ ಸೇರಿದರು. ಮುಂದಿನ ಎರಡು ಮೂರು ದಿನಗಳಲ್ಲಿ ಯುವ ನಾಯಕರು ಒಳಗೊಂಡಂತೆ ಸಹಸ್ರಾರು ಸಂಖ್ಯೆಯಲ್ಲಿ ಬಿಜೆಪಿಯಿಂದ ಪಕ್ಷ ಸೇರ್ಪಡೆಯಾಗಲಿದ್ದಾರೆ. ಬಿಜೆಪಿಯಲ್ಲಿ ಇದೀಗ ನಾಯಕತ್ವದ ಕೊರತೆ ಎದ್ದು ಕಾಣುತ್ತಿದ್ದು, ಆಡಳಿತ ಪಕ್ಷದಲ್ಲಿ ಸಾಮೂಹಿಕ ನಾಯಕರಿಲ್ಲದಂತಾಗಿದೆ. ಲಕ್ಷ್ಮಣ ಸವದಿ, ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಯಿಂದ ಪಕ್ಷಕ್ಕೆ ಬಲ ಬಂದಿದ್ದು, ಬಿಜೆಪಿ ದಿನೇ ದಿನೇ ಸೊರಗುತ್ತಿದೆ. ನಾಯಕರ ನಂತರ ಇದೀಗ ಕಾರ್ಯಕರ್ತರ ಪಕ್ಷಾಂತರ ಪರ್ವ ಆರಂಭವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.
ಲಕ್ಕಸಂದ್ರದ ತಮ್ಮ ನಿವಾಸದಲ್ಲಿ ಯುವ ಮೋರ್ಚಾ ಮಂಡಲದ ಕಾರ್ಯದರ್ಶಿ ಸಾಗರ್ ಬುಜ್ಜಿ, ಬಿಜೆಪಿಯ ಮುಖಂಡರು, 200ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಜಯನಗರ ಬಿಜೆಪಿ ಅಭ್ಯರ್ಥಿ ಆಯ್ಕೆ ಸರಿಯಿಲ್ಲ ಎಂದು ಆರೋಪಿಸಿ ಪಕ್ಷ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು. ಶಾಸಕರಾದ ಸೌಮ್ಯ ರೆಡ್ಡಿ, ಮಾಜಿ ಆಡಳಿತ ಪಕ್ಷದ ನಾಯಕ ಎನ್.ನಾಗರಾಜು ನೇತೃತ್ವದಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಿತು. ಮಂಡಲ ಸದಸ್ಯರು ಸೇರಿದಂತೆ ಹಲವರನ್ನು ಪಕ್ಷಕ್ಕೆ ಸೇರಿಸಿಕೊಂಡು ಮಾತನಾಡಿದ ಅವರು, ನಾಳೆಯಿಂದ ಬಿಜೆಪಿಯ ಐದು ಸಾವಿರ ಮುಖಂಡರು ಮತ್ತು ಕಾರ್ಯಕರ್ತರು ಸೇರಿ ಐದು ಸಾವಿರಕ್ಕೂ ಹೆಚ್ಚು ಮಂದಿ ಪಕ್ಷ ಸೇರಲಿದ್ದಾರೆ. ಇದಕ್ಕಾಗಿ ಬೃಹತ್ ಸಮಾವೇಶ ಆಯೋಜಿಸಲಾಗುವುದು. ಹಾಲಿ ಅಭ್ಯರ್ಥಿ ಕೆ.ಸಿ. ರಾಮಮೂರ್ತಿ ವಿರುದ್ಧ ಇವರೆಲ್ಲರೂ ಅಸಮಾಧಾನಗೊಂಡಿದ್ದಾರೆ. ಬಿಜೆಪಿ ಜನ ವಿರೋಧಿ ನೀತಿಗಳ ವಿರುದ್ಧ ಬಂಡಾಯ ಎದ್ದಿದ್ದಾರೆ ಎಂದರು.
ಯುವ ಮೋರ್ಚಾ ಮಂಡಲದ ಕಾರ್ಯದರ್ಶಿ ಸಾಗರ್ ಬುಜ್ಜಿ ಮಾತನಾಡಿ, ಕಳೆದ ಐದು ವರ್ಷದಿಂದ ಯುವಮೋರ್ಚಾ ಮಂಡಲ್ ಗೆ ಕಾರ್ಯದರ್ಶಿಯಾಗಿ ಕೆಲಸ ಮಾಡುತ್ತಿದ್ದು, ಕಾರ್ಯಕರ್ತರು ಬೆಳೆಯಲು ಬಿಜೆಪಿಯಲ್ಲಿ ಅವಕಾಶವಿಲ್ಲ ಎಂದು ಆರೋಪಿಸಿದರು.*
0 Comments